ಬೆಂಗಳೂರು, ಆಗಸ್ಟ್ 07: ಆಗಸ್ಟ್ 9ರಂದು ಮೆಟ್ರೋ (Namma Metro) ನೇರಳೆ ಮಾರ್ಗದಲ್ಲಿ ಅಗತ್ಯ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಎಂಆರ್ಸಿಎಲ್ (BMRCL) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಟ್ರಿನಿಟಿ, ಎಂ.ಜಿ.ರಸ್ತೆ ಸೇರಿದಂತೆ 6 ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ.
ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
ನಮ್ಮ ಮೆಟ್ರೋದ ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಆಗಸ್ಟ್ 9ರಂದು ಅಂದರೆ ಭಾನುವಾರ ಕೈಗೊಳ್ಳಲಿದೆ.
ಬಿಎಂಆರ್ಸಿಎಲ್ ಟ್ವೀಟ್
Temporary Suspension of Metro Services between Baiyappanahalli and MG Road on 9.08.2026 / 9ನೇ ಆಗಸ್ಟ್ 2026ರಂದು ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವೆ ಎರಡು ಗಂಟೆಗಳ ಕಾಲ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ. pic.twitter.com/pO6QF4PBgv
— ನಮ್ಮ ಮೆಟ್ರೋ (@OfficialBMRCL) August 7, 2026
ಈ ಕಾಮಗಾರಿಯನ್ನು ಕೈಗೊಳ್ಳಲು ಅನುಕೂಲವಾಗುವಂತೆ, ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸೇವೆಯನ್ನು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಅಂದರೆ ಎರಡು ಗಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ಈ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳು ನಿಯಮಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ.
- ಚಲ್ಲಘಟ್ಟದಿಂದ ಎಂ.ಜಿ. ರಸ್ತೆ
- ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ)
- ಮಾದಾವರದಿಂದ ಸಿಲ್ಕ್ ಇನ್ಸ್ಟಿಟ್ಯೂಟ್
- ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ
ಇದನ್ನೂ ಓದಿ: ಆತ್ಮಹತ್ಯೆ ಸ್ಪಾಟ್ ಆಗುತ್ತಿದೆಯಾ ಮೆಟ್ರೋ? ಈವರೆಗೆ ಪ್ರಾಣ ಕಳೆದುಕೊಂಡವರೆಷ್ಟು?
ಇನ್ನು ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ನಡುವಿನ ಮಾರ್ಗವನ್ನು ಒಳಗೊಂಡಂತೆ ಸಂಪೂರ್ಣ ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಪುನರಾರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ಸ್ಥಗಿತವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ಬಿಎಂಆರ್ಸಿಎಲ್ ಮನವಿ ಮಾಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.