Headlines

‘ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್​ನಲ್ಲಿ ವಿವರವಾದ ಚರ್ಚೆಗೆ ಸರ್ಕಾರ ಸಿದ್ಧ’; ಜೆ.ಪಿ ನಡ್ಡಾ ಭರವಸೆ – Kannada News | Government ready for detailed discussion on NEET Paper Leak in Parliament Session Union Minsiter JP Nadda says

ನವದೆಹಲಿ, ಜುಲೈ 22: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಮತ್ತು ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda), “ಈ ಸೂಕ್ಷ್ಮ ವಿಷಯವನ್ನು ಯಾರೂ ರಾಜಕೀಯಗೊಳಿಸಬಾರದು. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸಂಸತ್ತಿನಲ್ಲಿ ಈ ವಿಷಯದ ಕುರಿತು ಸುದೀರ್ಘ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ, “ಈ ವಿಷಯದಲ್ಲಿ ರಾಜಕೀಯ ಲಾಭ ಹುಡುಕುವುದು ಸರಿಯಲ್ಲ. ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ. ಮೊದಲನೆಯದಾಗಿ, ಈ ವಿಷಯವನ್ನು ರಾಜಕೀಯಗೊಳಿಸಬಾರದು ಮತ್ತು ಇದರಿಂದ ರಾಜಕೀಯ ಲಾಭ ಪಡೆಯಲು ಯತ್ನಿಸುವುದು ಸೂಕ್ತವಲ್ಲ ಎಂದು ನಾನು ವಿನಂತಿಸುತ್ತೇನೆ. ಇದೊಂದು ಗಂಭೀರ ಸಮಸ್ಯೆಯಾಗಿದ್ದು, ವಿವರವಾದ ಚರ್ಚೆಯ ಅಗತ್ಯವಿದೆ” ಎಂದಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ:

ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಉಲ್ಲೇಖಿಸಿದ 152 ಪೇಪರ್ ಲೀಕ್ ಪ್ರಕರಣಗಳ ಆರೋಪಗಳಿಗೆ ತಿರುಗೇಟು ನೀಡಿದ ಸಚಿವ ಜೆ.ಪಿ ನಡ್ಡಾ ಕಾಂಗ್ರೆಸ್ ನೇತೃತ್ವದ ಯುಪಿ ಸರ್ಕಾರದ ಅವಧಿಯಲ್ಲಿ ನಡೆದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ನೀಟ್ ಅಕ್ರಮ ಖಂಡಿಸಿ ಪ್ರಧಾನಿ ನಿವಾಸದ ಹೊರಗೆ ಕಾಂಗ್ರೆಸ್ ಧರಣಿ; ಮೋದಿ ರಾಜೀನಾಮೆಗೆ ರಾಹುಲ್ ಗಾಂಧಿ, ಖರ್ಗೆ ಒತ್ತಾಯ

“ಇಂಡಿಯ ಮೈತ್ರಿಕೂಟದ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ನಡೆದ ಪೇಪರ್ ಲೀಕ್‌ಗಳ ಬಗ್ಗೆ ಹಾಗೂ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಇಂತಹ ಘಟನೆಗಳ ಬಗ್ಗೆ ರಾಹುಲ್ ಗಾಂಧಿ ಏಕೆ ಮಾತನಾಡುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು. ರಾಹುಲ್ ಗಾಂಧಿ ಅವರಿಗೆ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವುದು ಅಥವಾ ಅವರ ಬೇಡಿಕೆಗಳಿಗಿಂತ ರಾಜಕೀಯ ಲಾಭ ಪಡೆಯುವುದೇ ಮುಖ್ಯವಾಗಿದೆ ಎಂದು ಆರೋಪಿಸಿದರು.

ಸಂಸತ್ತಿನಲ್ಲಿ ವಿಸ್ತೃತ ಚರ್ಚೆಗೆ ಸರ್ಕಾರ ಸಿದ್ಧ:

“ವಿದ್ಯಾರ್ಥಿಗಳ ಭವಿಷ್ಯವು ಅಪಾಯದಲ್ಲಿದೆ. ಹೀಗಾಗಿ, ಈ ವಿಷಯವು ಸಂಸತ್ತಿನಲ್ಲಿ ಗಂಭೀರ ಚರ್ಚೆಗೆ ಅರ್ಹವಾಗಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಚರ್ಚೆಗೆ ಎಷ್ಟು ಗಂಟೆಗಳ ಕಾಲಾವಕಾಶವನ್ನು ಕೇಳುತ್ತವೆಯೋ, ಅಷ್ಟು ಸಮಯವನ್ನು ನೀಡಲು ಸರ್ಕಾರ ಸಿದ್ಧವಾಗಿದೆ” ಎಂದು ಜೆಪಿ ನಡ್ಡಾ ತಿಳಿಸಿದರು.

ಇದನ್ನೂ ಓದಿ: ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

ಪರಿಹಾರಕ್ಕೆ ಆದ್ಯತೆ:

ವಿರೋಧ ಪಕ್ಷಗಳ ಇನ್ನೊಂದು ಬೇಡಿಕೆಯಾದ ಆತ್ಮಹತ್ಯೆ ಮಾಡಿಕೊಂಡ ನೀಟ್ ಪರೀಕ್ಷಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆಯೂ ಮಾತನಾಡಿದ ಜೆ.ಪಿ ನಡ್ಡಾ, “ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಕೇಂದ್ರ ಸರ್ಕಾರವು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದೆ” ಎಂದು ಸಮರ್ಥಿಸಿಕೊಂಡರು. ಆದರೆ, ವಿರೋಧ ಪಕ್ಷಗಳು ಮತ್ತು ಪ್ರತಿಭಟನಾಕಾರರ ಪ್ರಮುಖ ಮತ್ತು ಮೊದಲ ಬೇಡಿಕೆಯಾದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಕುರಿತು ಕೇಂದ್ರ ಸಚಿವ ಜೆ.ಪಿ ನಡ್ಡಾ ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *