
ಬೆಂಗಳೂರು, ಮಾ.6: ಇಂದಿನ (ಮಾ.6) ಕರ್ನಾಟಕ ಬಜೆಟ್ 2026ರಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣ ಮತ್ತು ವಸತಿ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಆಧ್ಯಾತ್ಮಿಕರು ಹಾಗೂ ಸಮದಾಯದವರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಲಾಗಿದೆ. ಸೇಲಂನ ಬೆನೆಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪನೆಗೆ 5 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು. ವಕ್ಫ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಮತ್ತು ಸವಣೂರಿನಲ್ಲಿ ಹೊಸ ಮಹಿಳಾ ಪಿಯು ಕಾಲೇಜನ್ನು ಪ್ರಾರಂಭಿಸಲಾಗುವುದು. ವಾಣಿಜ್ಯ ಉದ್ದೇಶಕ್ಕೆ ಬೇಡಿಕೆ ಇರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಬೀದರ್ನ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪಿಸಲಾಗುವುದು. ವಸತಿ ಯೋಜನೆಗಳಡಿಯಲ್ಲಿ 4,99,454 ಮನೆಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಹಿಂದಿನ ಸರ್ಕಾರ ಮಂಜೂರು ಮಾಡಿರುವ 4,90,000 ಮನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಿಎಲ್ಸಿ ಆಧಾರಿತ 1 ಲಕ್ಷ ಮನೆಗಳ ಹೊಸ ಗುರಿ ನಿಗದಿಪಡಿಸಲಾಗಿದ್ದು, ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನವನ್ನು 1,20,000 ರೂ. ರಿಂದ 2 ಲಕ್ಷಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ 2 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ