ಬೆಂಗಳೂರು, ಫೆಬ್ರವರಿ 25: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎನ್ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ, ಮುಂಬರುವ ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎನ್ಡಿಎ ಜೊತೆಗೇ ಎದುರಿಸಲು ತಮ್ಮ ಪಕ್ಷಕ್ಕೆ ಆಕಾಂಕ್ಷೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದು ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಮತ್ತು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ನಡುವಿನ ನಿರ್ಧಾರವಾಗಿದ್ದು, ಅಂತಿಮ ತೀರ್ಮಾನವನ್ನು ಬಿಜೆಪಿ ತೆಗೆದುಕೊಳ್ಳಬೇಕು. ಬಿಜೆಪಿಯವರು ಯಾವ ನಿರ್ಣಯ ತೆಗೆದುಕೊಳ್ಳುತ್ತಾರೆ ಮತ್ತು ಯಾವ ಭಾವನೆ ವ್ಯಕ್ತಪಡಿಸುತ್ತಾರೆ ಎಂಬುದರ ಮೇಲೆ ಜೆಡಿಎಸ್ ತನ್ನ ಮುಂದಿನ ಹೆಜ್ಜೆ ಇಡಲಿದೆ. ಸಂಸತ್ ಮತ್ತು ಅಸೆಂಬ್ಲಿ ಚುನಾವಣೆಗಳಲ್ಲಿ ಎನ್ಡಿಎ ಜೊತೆಗೇ ಹೋಗೋದಾಗಿಯೂ ಅವರು ಈ ವೇಳೆ ತಿಳಿಸಿದ್ದಾರೆ.
ಕೇಂದ್ರ ನಾಯಕರೊಂದಿಗೆ ಚರ್ಚಿಸಲು ಹೆಚ್.ಡಿ.ಕುಮಾರಸ್ವಾಮಿಯವರು ದೆಹಲಿಗೆ ತೆರಳಿದ್ದಾರೆ. ಅವರು ವಾಪಸ್ ಬಂದ ನಂತರ ನಿಖಿಲ್ ಕುಮಾರಸ್ವಾಮಿ, ತಿಪ್ಪೇಸ್ವಾಮಿ, ಬಾಬು ಹಾಗೂ ಇತರ ನಾಯಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವೇಗೌಡರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
