ನವದೆಹಲಿ, ಆಗಸ್ಟ್ 6: ಬಿಡದಿ ಟೌನ್ಶಿಪ್ ಬಗ್ಗೆ ರೈತರ ಆತಂಕ ಮತ್ತು ವಿರೋಧದ ಬಳಿಕ ಭೂಸ್ವಾಧೀನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸರ್ಕಾರ ಸ್ಥಗಿತಗೊಳಿಸಲಾಗಿದೆ. ಆದರೆ ಯೋಜನೆಯನ್ನು ಸಂಪೂರ್ಣ ವಾಪಸ್ ಪಡೆದಿಲ್ಲ. ಹೀಗಾಗಿ ಪ್ರತಿಭಟನೆಗಳನ್ನು ಇನ್ನೂ ನಿಂತಿಲ್ಲ. ಈ ಮಧ್ಯೆ ಬಿಡದಿ ಟೌನ್ಶಿಪ್ ವಿಚಾರವಾಗಿ ಜಂಟಿ ಹೋರಾಟಕ್ಕೆ ಬಿಜೆಪಿ, ಜೆಡಿಎಸ್ ಮುಂದಾಗಿವೆ. ಬುಧವಾರ ದೆಹಲಿಯಲ್ಲಿ ಕೇಂದ್ರಸಚಿವ ಹೆಚ್.ಡಿ.ಕುಮಾರಸ್ವಾಮಿಯನ್ನು ಪ್ರತಿಫಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ.ಮೋಹನ್ ಭೇಟಿಯಾಗಿ, ಬಿಡದಿ ಟೌನ್ಶಿಪ್ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ನಡೆಸುವ ಹೋರಾಟ ವಿಚಾರವಾಗಿ ಚರ್ಚಿಸಿದರು.
ಉಭಯ ಪಕ್ಷಗಳು ಜಂಟಿಯಾಗಿ ಅಥವಾ ಪ್ರತ್ಯೇಕವಾಗಿ ಪಾದಯಾತ್ರೆ ನಡೆಸಬೇಕೇ ಎಂಬ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ರೂಪುರೇಷೆ ಅಂತಿಮಗೊಳಿಸಿ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಆಗಸ್ಟ್ 13ರಿಂದ ಆರಂಭವಾಗುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿಯೂ ರೈತರ ಪರವಾಗಿ ಹಾಗೂ ಟೌನ್ಶಿಪ್ ಯೋಜನೆ ವಿರುದ್ಧ ಬಲವಾದ ಧ್ವನಿ ಎತ್ತಲು ಪ್ರತಿಪಕ್ಷಗಳು ನಿರ್ಧರಿಸಿವೆ.
ಸಭೆ ಬಳಿಕ ಮಾತಾಡಿದ ಆರ್.ಅಶೋಕ್, ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಸದನದಲ್ಲೂ ದೊಡ್ಡ ಹೋರಾಟ ನಡೆಸಲಾಗುವುದು. ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿಯೂ ರಚನೆಯಾಗಬೇಕಿದ್ದು, ಆ ಬಗ್ಗೆಯೂ ಸಮಾಲೋಚಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
