
ಬೆಂಗಳೂರು, ಆಗಸ್ಟ್ 10: ನಗರದಲ್ಲಿ ಇಂದು ಕೂಡ ಮಳೆರಾಯನ ಎಂಟ್ರಿ ಆಗಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ಮಳೆ ಆರಂಭವಾಗಿದೆ. ವಿಜಯನಗರ, ನಾಗರಬಾವಿ, ಟೌನ್ಹಾಲ್, ಮಲ್ಲೇಶ್ವರಂ, ಪ್ಯಾಲೇಸ್ ಗುಟ್ಟಹಳ್ಳಿ, ಸ್ಯಾಟಲೈಟ್, ಯಶವಂತಪುರ, ವಿಧಾನಸೌಧ, ಕೆ.ಆರ್. ಸರ್ಕಲ್, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಕಾರ್ಪೊರೇಷನ್ ಸುತ್ತಮುತ್ತ ಹಾಗೂ ಶಿವಾಜಿನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ. ಧಾರಾಕಾರ ಸುರಿದ ಮಳೆಗೆ ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ತೀವ್ರ ಹೈರಾಣಾಗಿ ಅಂಡರ್ಪಾಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು. ಇನ್ನೊಂದೆಡೆ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯ ಕೆಂಪಲಿಂಗನಹಳ್ಳಿ ಬಳಿ ಮಳೆಯಿಂದಾಗಿ ರಸ್ತೆ ಸರಿಯಾಗಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.