ಬೆಂಗಳೂರು, (ಜೂನ್ 29): ಕೃಷ್ಣಭೈರೇಗೌಡರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಲಾಖೆಯ ಕಾರ್ಯಗಳಿಗೆ ಚುರುಕು ಮುಟ್ಟಿಸಿದ್ದು, ಮೇಲಿಂದ ಮೇಲೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಕಸ, ರಸ್ತೆ ಗುಂಡಿ ಹಾಗೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಗೆ ಕೆಲ ಕಟ್ಟು ನಿಟ್ಟಿನ ಸಲಹೆ ಸೂಚನೆಗಳನ್ನು ನೀಡುತ್ತಲೇ ಇದ್ದು, ಕೃಷ್ಣಭೈರೇಗೌಡ ಅವರ ಈ ಕಾರ್ಯಕ್ಕೆ ಜನ ಸಹ ಫಿದಾ ಆಗಿದ್ದಾರೆ. ಅಲ್ಲದೇ ಅವರ ಕಾರ್ಯವೈಖರಿಗಳ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಸ್ವತಃ ಕೃಷ್ಣಭೈರೇಗೌಡ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಕಳೆದ ಕೆಲವು ದಿನಗಳಲ್ಲಿ ಸಾವಿರಾರು ಬೆಂಗಳೂರಿಗರು ತಮ್ಮ ಸಲಹೆಗಳು, ದೂರುಗಳು ಹಾಗೂ ಕಾಳಜಿಯ ಜೊತೆಗೆ ಸಹಾಯ ಮಾಡುವ ಆಫರ್ಗಳೊಂದಿಗೆ ನಮ್ಮನ್ನು ಸಂಪರ್ಕಿಸಿದ್ದಾರೆ. ನಿಮ್ಮ ಬೆಂಬಲ ಮತ್ತು ಮೌಲ್ಯಯುತವಾದ ಪ್ರತಿಕ್ರಿಯೆಗೆ ಧನ್ಯವಾದಗಳು. ನಾನು ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಪ್ರತಿಕ್ರಿಯಿಸಲು ಸಾಧ್ಯವಾಗದಿರಬಹುದು, ಆದರೆ ನಿಮ್ಮ ಕಾಳಜಿಗೆ ಪೂರಕವಾಗಿ ನಮ್ಮ ತಂಡವು ಕೆಲಸ ಮಾಡುತ್ತಿದೆ. ಸ್ಥಳೀಯ ಸಂಸ್ಥೆಗಳು ದೈನಂದಿನ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸುವಂತೆ ನಮ್ಮ ವ್ಯವಸ್ಥೆಯನ್ನು ಬಲಪಡಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.
