ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ತೀವ್ರ ಕಾರ್ಯಾಚರಣೆ: 15 ಬಾಂಗ್ಲಾದೇಶಿಗರ ಬಂಧನ – Kannada News | 15 Bangladeshi Nationals Arrested in Bengaluru During Special Police Drive Against Illegal Immigrants

ಬೆಂಗಳೂರು, ಆಗಸ್ಟ್ 10: ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ಪೊಲೀಸರು ಶನಿವಾರ ಮುಂಜಾನೆ ಹಠಾತ್ ಜಂಟಿ ಕಾರ್ಯಾಚರಣೆ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ 15 ಬಾಂಗ್ಲಾದೇಶಿ (Bangladeshi) ಪ್ರಜೆಗಳನ್ನು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದ ವ್ಯಾಪ್ತಿಯಲ್ಲಿ ಈ ವಿಶೇಷ ಪರಿಶೀಲನಾ ಕಾರ್ಯಾಚರಣೆ ನಡೆದಿದ್ದು, ಅಕ್ರಮ ವಲಸಿಗರ ಪತ್ತೆಗಾಗಿ ಪೊಲೀಸರು ಬೃಹತ್ ಜಾಲ ಬೀಸಿದ್ದಾರೆ.

29 ಸ್ಥಳಗಳ ಮೇಲೆ ಏಕಕಾಲಕ್ಕೆ ಮುಂಜಾನೆ ದಾಳಿ

ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಗುರುತಿಸಲು ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದ ಒಟ್ಟು 29 ಗುರುತಿಸಲಾದ ಸೂಕ್ಷ್ಮ ಪ್ರದೇಶಗಳಲ್ಲಿ ಶನಿವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಲಾಯಿತು. ಈ ಬೃಹತ್ ಕಾರ್ಯಾಚರಣೆಗಾಗಿ 23 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಒಟ್ಟು 295 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಜಂಟಿ ಶೋಧ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ವಿಭಾಗದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡಗಳು, ತಾತ್ಕಾಲಿಕ ಶೆಡ್‌ಗಳು ಮತ್ತು ಶಂಕಿತ ಅಡಗುದಾಣಗಳ ಮೇಲೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದರು. ಈ ತಪಾಸಣೆಯ ಸಂದರ್ಭದಲ್ಲಿ ಸೂಕ್ತ ದಾಖಲೆಗಳಿಲ್ಲದ ಹಾಗೂ ಶಂಕಿತ ಸಂದರ್ಭಗಳಲ್ಲಿ ಕಂಡುಬಂದ ಒಟ್ಟು 1,909 ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಯಿತು. ಅವರಲ್ಲಿ ಅಂತಿಮವಾಗಿ 15 ಬಾಂಗ್ಲಾದೇಶಿ ಪ್ರಜೆಗಳನ್ನು ಅಕ್ರಮ ವಾಸ್ತವ್ಯದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಬೇಗೂರು ಮತ್ತು ಪರಪ್ಪನ ಅಗ್ರಹಾರದಲ್ಲಿ ಸಿಕ್ಕಿಬಿದ್ದ ವಲಸಿಗರು

ಪೊಲೀಸ್ ವರದಿಗಳ ಪ್ರಕಾರ, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿ, 339 ವ್ಯಕ್ತಿಗಳನ್ನು ಪರಿಶೀಲಿಸಿದವು. ಈ ವೇಳೆ ಎಂಟು ಜನ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಯಿತು. ಅದೇ ರೀತಿ, ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಪೊಲೀಸ್ ತಂಡಗಳು ನಡೆಸಿದ ದಾಳಿಯಲ್ಲಿ 355 ಜನರನ್ನು ಪ್ರಶ್ನಿಸಲಾಗಿದ್ದು, ಕಾನೂನುಬಾಹಿರವಾಗಿ ವಾಸಿಸುತ್ತಿದ್ದ ಏಳು ಬಾಂಗ್ಲಾದೇಶಿಗರನ್ನು ಬಂಧಿಸಲಾಗಿದೆ.

ಇದನ್ನೂ ಓದಿ ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಭರ್ಜರಿ ಕಾರ್ಯಾಚರಣೆ, 40 ಮಂದಿ ವಶಕ್ಕೆ

ಎಲೆಕ್ಟ್ರಾನಿಕ್ಸ್ ಸಿಟಿ, ಬಂಡೇಪಾಳ್ಯ, ಹುಳಿಮಾವು ಮತ್ತು ಹೆಬ್ಬಗೋಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯ 21 ಸ್ಥಳಗಳಲ್ಲೂ ತೀವ್ರ ಶೋಧ ನಡೆಸಲಾಯಿತಾದರೂ, ಅಲ್ಲಿ ಯಾವುದೇ ಅಕ್ರಮ ವಿದೇಶಿ ಪ್ರಜೆಗಳು ಪತ್ತೆಯಾಗಿಲ್ಲ. ಮತ್ತೊಂದೆಡೆ, ಈ ತಪಾಸಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನೂರಾರು ವಲಸೆ ಕಾರ್ಮಿಕರನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆಯಲಾಗಿದೆ ಮತ್ತು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿ ಕೆಲವು ನಾಗರಿಕ ಹಕ್ಕುಗಳ ಸಂಘಟನೆಗಳು ರಾಜ್ಯ ಗೃಹ ಸಚಿವರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:42 am, Mon, 10 August 26

Source link

Leave a Reply

Your email address will not be published. Required fields are marked *