ಬೆಂಗಳೂರು, ಜುಲೈ 1: ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ನಗರದ ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲೂ ಈ ಕಾರ್ಯಚರಣೆ ಚುರುಕುಗೊಂಡಿದ್ದು, ಜೆಸಿಬಿ ಮತ್ತು ಟ್ರ್ಯಾಕ್ಟರ್ಗಳ ಮೂಲಕ ಒತ್ತುವರಿಗಳನ್ನು ತೆರವು ಮಾಡಲಾಗುತ್ತಿದೆ. ಚಾಮರಾಜಪೇಟೆಯ 5ನೇ ಮುಖ್ಯರಸ್ತೆಯಲ್ಲಿಯೂ ಕೇಂದ್ರ ಪಾಲಿಕೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ನಿರ್ಮಾಣ ಸಾಮಗ್ರಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಲಾಗಿದೆ.
ಪಾದಚಾರಿ ಮಾರ್ಗದಲ್ಲಿ ಯಾವುದೇ ರೀತಿಯ ಕಟ್ಟಡ ಸಾಮಗ್ರಿಗಳನ್ನು ಅಥವಾ ಅಂಗಡಿಗಳನ್ನು ಇಡುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. ಆದರೆ, ಈ ತೆರವು ಕಾರ್ಯಾಚರಣೆಯಿಂದ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನಗೊಂಡಿದ್ದಾರೆ. ಬಿಬಿಎಂಪಿ ಈ ಹಿಂದೆ ಕೊಟ್ಟಿದ್ದ ಗುರುತಿನ ಚೀಟಿ ಪಡೆದು ಹಲವು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ತಮ್ಮನ್ನು ಈಗ ತೆರವು ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಗುರುತಿನ ಚೀಟಿ ಕೊಟ್ಟವರೇ ಈಗ ನಮ್ಮ ಅಂಗಡಿಗಳನ್ನು ತೆರವು ಮಾಡುತ್ತಿದ್ದಾರೆ. ನಾವು ಎಲ್ಲಿಗೆ ಹೋಗಿ ವ್ಯಾಪಾರ ಮಾಡಬೇಕು ಎಂದು ಬೀದಿ ಬದಿ ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ಪಾದಚಾರಿಗಳಿಗೆ ತೊಂದರೆಯಾಗದಂತೆ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಅವರು ಮನವಿ ಮಾಡಿದ್ದಾರೆ.
ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
