ಬೆಂಗಳೂರು, ಆಗಸ್ಟ್ 7: ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡಿಸಲು ಬಂದ ಅರ್ಜಿದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದ್ದು, ಆರ್.ಆರ್.ನಗರ ವಲಯ ಕಚೇರಿಯಲ್ಲಿ ಸಾರ್ವಜನಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಪಶ್ಚಿಮ ನಗರ ಪಾಲಿಕೆಯ ಆರ್.ಆರ್.ನಗರ ವಲಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೇ ತಿಂಗಳಲ್ಲೇ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದ್ದರೂ ಇನ್ನೂ ಖಾತೆ ಬದಲಾಗಿಲ್ಲ ಎಂದು ಆರೋಪಿಸಿರುವ ಅರ್ಜಿದಾರರು, ಈ ಹಿನ್ನೆಲೆಯಲ್ಲಿ ಕಚೇರಿಗೆ ಆಗಮಿಸಿ ಶೀಘ್ರವೇ ಖಾತೆ ಪರಿವರ್ತನೆ ಮಾಡಿಕೊಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ವೇಳೆ ಅರ್ಜಿದಾರರನ್ನು ಒಬ್ಬೊಬ್ಬರನ್ನೇ ಕರೆಸಿ ತಲಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ‘‘ಜಂಟಿ ಆಯುಕ್ತೆ ಮೇಡಂಗೆ ಕೊಡಬೇಕು. ಹೀಗಾಗಿ ಪ್ರತಿಯೊಬ್ಬರು 40 ಸಾವಿರ ರೂ. ನೀಡಬೇಕು’’ ಎಂದು ಅಧಿಕಾರಿಗಳು ಹೇಳಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.
ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಕಚೇರಿಯಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆಗೆ ಸಂಬಂಧಿಸಿದಂತೆ ಲಂಚ ಕೇಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ಕೆಲಕಾಲ ಗಲಾಟೆಯ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
