ಬೆಂಗಳೂರು, ಏ.27: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ (Adugodi) ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ಯುವತಿಯನ್ನು ಪೂಜಾ ದತ್ತ (34) ಎಂದು ಗುರುತಿಸಲಾಗಿದೆ. ಪೂಜಾ ದತ್ತ ಅವರು ಮೂಲತಃ ಜಾರ್ಖಂಡ್ನ ಧನಬಾದ್ ಸಮೀಪದ ಹಿರಾಪುರ ನಿವಾಸಿಯಾಗಿದ್ದರು. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪೂಜಾ ಅವರ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ.
ಮನೆಯಿಂದ ಭಾರಿ ದುರ್ನಾತ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಮುರಿದು ನೋಡಿದಾಗ ಭೀಕರ ದೃಶ್ಯ ಕಣ್ಣಿಗೆ ಬಿದ್ದಿದೆ. ಪೂಜಾ ದತ್ತ ಅವರ ಮೃತದೇಹ ಸಂಪೂರ್ಣವಾಗಿ ಬೆತ್ತಲೆ ಸ್ಥಿತಿಯಲ್ಲಿ ಮತ್ತು ಅರೆಕೊಳೆತ ಸ್ಥಿತಿಯಲ್ಲಿತ್ತು. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸಾವು ಸಂಭವಿಸಿ ಕನಿಷ್ಠ 2-3 ದಿನಗಳು ಕಳೆದಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: ನೈಜ ಕ್ರೈಂಗೆ ಎಫ್ಐಆರ್ ಮಾಡಲ್ಲ, 2 ವರ್ಷಗಳ ಹಳೆಯ ಹಸು ನಾಪತ್ತೆ ಕೇಸ್ಗೆ ತರಾತುರಿ ಮಾಡ್ತೀರಾ? ಪೊಲೀಸರಿಗೆ ಹೈಕೋರ್ಟ್ ತರಾಟೆ
ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದು ಸಾವಿನ ಕುರಿತು ಭಾರಿ ಅನುಮಾನಗಳನ್ನು ಮೂಡಿಸಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೋಸ್ಟ್ಮಾರ್ಟಂಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೂಜಾ ಅವರ ಫೋನ್ ಕರೆಗಳು ಮತ್ತು ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
