ಬೆಳ್ತಂಗಡಿ, ಜು.7: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ‘ಗಡಾಯಿಕಲ್ಲು’ (Gadaikallu) ಚಾರಣಕ್ಕೆ ಜುಲೈ 8 ರಿಂದ ಜಾರಿಗೆ ಬರುವಂತೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಬೆಟ್ಟದ ಕಲ್ಲುಗಳು ಮತ್ತು ಹಾದಿ ವಿಪರೀತ ಜಾರುತ್ತಿರುವುದರಿಂದ ಚಾರಣ ಮಾಡುವುದು ಅತ್ಯಂತ ಅಪಾಯಕಾರಿಯಾಗಿದೆ. ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಸಾರ್ವಜನಿಕರ ಹಾಗೂ ಚಾರಣಿಗರ ಪ್ರವೇಶಕ್ಕೆ ಕಡ್ಡಾಯ ನಿಬಂಧನೆ ವಿಧಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಈ ವರ್ಷ ಜೂನ್ 1 ರಂದು ಗಡಾಯಿಕಲ್ಲು ಚಾರಣಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಆದರೆ, ಆರಂಭಗೊಂಡ ಕೆಲವೇ ದಿನಗಳಲ್ಲಿ ಮಳೆಯ ಕಾರಣದಿಂದಾಗಿ ಮೊದಲ ಬಾರಿಗೆ ನಿಷೇಧ ಹೇರಲಾಗಿತ್ತು. ತದನಂತರ ಪರಿಸ್ಥಿತಿ ಸುಧಾರಿಸಿದ್ದನ್ನು ನೋಡಿ ಜೂನ್ 25 ರಂದು ಚಾರಣಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿರುವುದರಿಂದ, ಜುಲೈ 8 ರಿಂದ ಅನ್ವಯವಾಗುವಂತೆ ಮತ್ತೊಮ್ಮೆ ಟ್ರೆಕ್ಕಿಂಗ್ಗೆ ಬ್ರೇಕ್ ಹಾಕಲಾಗಿದೆ.
ಇದನ್ನೂ ಓದಿ: ಕಳೆದ 24 ಗಂಟೆಯಲ್ಲಿ ಹೊನ್ನೆತಾಳು, ಬಿರುನಾನಿಯಲ್ಲಿ ದಾಖಲೆ ಬರೆದ ಮಳೆ
ಮಂಗಳೂರಿನಲ್ಲಿ ಮುಂದಿನ 24 ಗಂಟೆ ಭಾರೀ ಮಳೆ:
ಕರಾವಳಿ ಜಿಲ್ಲೆಯ ಜನತೆಗೆ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆಯೊಂದನ್ನು ನೀಡಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ 24 ಗಂಟೆಗಳ ಅವಧಿಯಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯ ಅಬ್ಬರ ಅತ್ಯಂತ ತೀವ್ರವಾಗಿರಲಿದ್ದು, ಸುಮಾರು 130 ಮಿ.ಮೀ ನಷ್ಟು ಭಾರಿ ಮಳೆಯಾಗುವ ಸಾಧ್ಯತೆ ಇದೆ. ನಿರಂತರವಾಗಿ ಸುರಿಯಲಿರುವ ಈ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಭೀತಿ ಎದುರಾಗಿದೆ.
ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟ ಪ್ರದೇಶಗಳಲ್ಲಿ ಮತ್ತು ಗುಡ್ಡಗಾಡು ವಲಯಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಎಚ್ಚರಿಸಲಾಗಿದೆ. ಹೀಗಾಗಿ ಘಾಟಿ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಗುಡ್ಡದ ತಪ್ಪಲಿನಲ್ಲಿ ವಾಸಿಸುವ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಎಂದು ಕಂದಾಯ ಹಾಗೂ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
