ಬೆಂಗಳೂರು, ಏಪ್ರಿಲ್ 29: ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಮುಖ್ಯಮಂತ್ರಿ ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಏಳು ಜನ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಗೋಡೆ ಕುಸಿತದ ಕಾರಣದ ಬಗ್ಗೆ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದು, ಆಸ್ಪತ್ರೆ ಆವರಣದಲ್ಲಿ ಮಣ್ಣು ಸುರಿಯುವ ಕೆಲಸ ನಡೆಯುತ್ತಿದೆ. ಇದರಿಂದ ಉಂಟಾದ ಒತ್ತಡದಿಂದಾಗಿ ಕಾಂಪೌಂಡ್ ಗೋಡೆ ಕುಸಿದಿರಬಹುದು ಎಂದು ಮೇಲ್ನೋಟಕ್ಕೆ ಅಂದಾಜಿಸಲಾಗಿದೆ. ಗೋಡೆಯ ಸ್ಥಿತಿ ಶಿಥಿಲವಾಗಿತ್ತೇ ಅಥವಾ ಭದ್ರತಾ ದೃಷ್ಟಿಯಿಂದ ಸರಿಯಾಗಿತ್ತೇ ಎಂದು ಪರಿಶೀಲಿಸಬೇಕಿತ್ತು. ಈ ಕುರಿತು ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಪ್ರಶ್ನಿಸಲಾಗಿದೆ. ಗೋಡೆ ಶಿಥಿಲವಾಗಿದ್ದರೂ, ಅಲ್ಲಿ ಬೀದಿ ವ್ಯಾಪಾರಗಾರರು ವ್ಯಾಪಾರ ನಡೆಸುತ್ತಿದ್ದುದರ ಬಗ್ಗೆಯೂ ತನಿಖೆ ನಡೆಸಲಾಗುವುದು. ಇಂಜಿನಿಯರ್ಗಳ ಯಾವುದೇ ತಪ್ಪಿತಸ್ಥತೆ ಕಂಡುಬಂದರೆ, ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
