ಮೈಸೂರು, ಆ.1: ನೆರೆ ರಾಜ್ಯ ಕೇರಳದ ವಯನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯವು (Kabini Reservoir) ಭರ್ತಿಯಾಗುವ ಹಂತ ತಲುಪಿದೆ. ಜಲಾಶಯದ ಭದ್ರತೆ ಹಾಗೂ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಬಿನಿ ಡ್ಯಾಂನಿಂದ ನದಿಗೆ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ನದಿಗೆ ಹರಿಸಲಾದ ಈ ನೀರು ಕಪಿಲಾ (ಕಬಿನಿ) ನದಿಯ ಮೂಲಕ ತಮಿಳುನಾಡಿಗೆ ಹರಿದು ಹೋಗಲಿದೆ. ವಯನಾಡು ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ಕಬಿನಿ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಪರಿಣಾಮವಾಗಿ ಹಂತ ಹಂತವಾಗಿ ಕಬಿನಿ ಡ್ಯಾಂನಿಂದ ನೀರು ಬಿಡುಗಡೆಯ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಕಪಿಲಾ ನದಿಯ ಎರಡೂ ದಂಡೆಗಳ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಾಲೂಕು ಆಡಳಿತ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಜಾಗೃತಿ ಮೂಡಿಸಿ ಮುನ್ನೆಚ್ಚರಿಕೆ ನೀಡಿದ್ದಾರೆ. ನದಿ ನೀರು ಯಾವುದೇ ಕ್ಷಣದಲ್ಲೂ ಉಕ್ಕಿ ಹರಿಯುವ ಸಾಧ್ಯತೆಯಿರುವುದರಿಂದ ನದಿ ಪಾತ್ರದ ನಿವಾಸಿಗಳು ತಮ್ಮ ಮನೆ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಾಗಿ ಮನವಿ ಮಾಡಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
