ಭಾರತ ಸರ್ಕಾರದ ವಿರುದ್ಧ ಹೋರಾಡುತ್ತೇವೆ ಎಂದಿದ್ದ ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್​ನಿಂದ ಬಿಗ್ ರಿಲೀಫ್ – Kannada News | Big relief for rahul gandhi allahabad high court dismisses plea seeking fir against him over 2025 remark

ಲಕ್ನೋ, ಮೇ 1: ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ವಿವಾದಾತ್ಮಕ ‘ಭಾರತದ ವಿರುದ್ಧ ಹೋರಾಡುತ್ತೇವೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ಡಿ. ಚೌಹಾಣ್ ಅವರನ್ನೊಳಗೊಂಡ ಏಕ ಸದಸ್ಯ ಪೀಠವು ಮುಕ್ತ ನ್ಯಾಯಾಲಯದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿತು. ಅಲ್ಲದೆ, ರಾಹುಲ್ ಗಾಂಧಿಯವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.

2025ರಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಅರ್ಜಿದಾರರು ಮಂಡಿಸಿದ ವಾದಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಲಾದ ದೂರಿಗೆ ಸಂಬಂಧಿಸಿದ ಹಿಂದಿನ ಆದೇಶಗಳನ್ನು ಪ್ರಶ್ನಿಸಿದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಕೋರ್ಟ್ ನಿರಾಕರಿಸಿತು.

ಇದನ್ನೂ ಓದಿ: ದ್ವಿಪೌರತ್ವ ಪ್ರಕರಣ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಜನವರಿ 15, 2025ರಂದು ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಹೇಳಿಕೆಯ ಕುರಿತು ಎಫ್‌ಐಆರ್ ದಾಖಲಿಸಬೇಕೆಂದು ಅರ್ಜಿದಾರರು ವಾದಿಸಿದ್ದರು. ಆದರೆ, ಕೆಳ ನ್ಯಾಯಾಲಯವು ಈ ಬೇಡಿಕೆಯನ್ನು ತಿರಸ್ಕರಿಸಿದ ನಂತರ ಈ ವಿಷಯವು ಹೈಕೋರ್ಟ್‌ಗೆ ತಲುಪಿತ್ತು. ಏಪ್ರಿಲ್ 8ರಂದು ಹೈಕೋರ್ಟ್ ವಿಚಾರಣೆಯನ್ನು ಪೂರ್ಣಗೊಳಿಸಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಈಗ ಆದೇಶ ನೀಡಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ

ಏನಿದು ಪ್ರಕರಣ?:

2025ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ರಾಹುಲ್ ಗಾಂಧಿ ಮಾತನಾಡುವಾಗ “ನಾವು ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇವೆ” ಎಂದು ಹೇಳಿದ್ದರು. ಅರ್ಜಿದಾರರ ಪ್ರಕಾರ, ಈ ಹೇಳಿಕೆಯು ದೇಶಾದ್ಯಂತ ಸಾರ್ವಜನಿಕ ಭಾವನೆಗಳಿಗೆ ನೋವುಂಟು ಮಾಡಿದೆ ಮತ್ತು ಇದು ದೇಶದ್ರೋಹಕ್ಕೆ ಸಮಾನವಾಗಿದೆ. ಈ ಪದಗಳು ದೇಶವನ್ನು ಅಸ್ಥಿರಗೊಳಿಸುವ ಉದ್ದೇಶವನ್ನು ಹೊಂದಿವೆ. ಆದ್ದರಿಂದ ರಾಹುಲ್ ಗಾಂಧಿ ವಿರುದ್ಧ ತಕ್ಷಣ ಕ್ರಿಮಿನಲ್ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಅವರು ವಾದಿಸಿದ್ದರು. ಆದರೆ, ಇಂದು ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *