Headlines

ಮಂಗಳೂರು: ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ! ಮಗಳನ್ನು ಕೊಂದು ತಂದೆಗೆ ಕರೆ ಮಾಡಿದ ಪಾಗಲ್ ಪ್ರೇಮಿ ಪೊಲೀಸರ ವಶ – Kannada News | Man unalives woman named Lavanya at B.C road bus stand, Bantwal: One sided Love suspected, Accused Arrested

ಬಿ.ಸಿ.ರೋಡ್​ ಬಸ್​ ನಿಲ್ದಾಣದಲ್ಲಿ ತಲ್ವಾರ್​ನಿಂದ ಯುವತಿಯ ಹತ್ಯೆ!

ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯೊಬ್ಬಳ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಕಕ್ಕೆಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ಈ ಹೇಯ ಕೃತ್ಯ ಎಸಗಿದ್ದು, ಮಂಗಳೂರು ಹೊರವಲಯದ ವಾಮಂಜೂರು ಪಚ್ಚನಾಡಿ ಬಳಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ನಡೆದಿದ್ದೇನು?

ಮೃತ ಲಾವಣ್ಯ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಳು. ಆಕೆ ಮತ್ತು ಆರೋಪಿ ಚೇತನ್ ಇಬ್ಬರೂ ದೂರದ ಸಂಬಂಧಿಗಳಾಗಿದ್ದು, ಯುವತಿಯನ್ನು ಆರೋಪಿ ಏಕಮುಖವಾಗಿ ಇಷ್ಟಪಡುತ್ತಿದ್ದ (One sided Love) ಎನ್ನಲಾಗಿದೆ. ಗುರುವಾರ (ಜು.16) ಸಂಜೆ ಸುಮಾರು 6 ಗಂಟೆಗೆ ಲಾವಣ್ಯ ಬಂಟ್ವಾಳದಿಂದ ಕಕ್ಕೆಪದವುಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಕುಳಿತಿದ್ದಳು. ಈ ವೇಳೆ ಆರೋಪಿ ಆಕೆಯ ಪಕ್ಕದಲ್ಲಿ ಬಂದು ಕುಳಿತಿದ್ದ. ಇದನ್ನು ಗಮನಿಸಿದ ಯುವತಿ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದಳು. ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.

ಚಿಕಿತ್ಸೆ ಫಲಿಸದೆ ಯುವತಿ ಸಾವು

ಯುವತಿ ಬಸ್‌ನಿಂದ ಕೆಳಗಿಳಿದ ತಕ್ಷಣ ಚೇತನ್ ಆಕೆಯನ್ನು ಬೆನ್ನಟ್ಟಿದ್ದಾನೆ. ಆರೋಪಿ ತನ್ನ ಬ್ಯಾಗ್‌ನಿಂದ ತಲ್ವಾರ್ ಹೊರತೆಗೆದಾಗ ಲಾವಣ್ಯ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಈ ವೇಳೆ ಲಾವಣ್ಯಳ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಲಾವಣ್ಯ ಅವರನ್ನು ತಕ್ಷಣವೇ ಬಂಟ್ವಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತಂದೆಗೆ ಕರೆ ಮಾಡಿದ್ದ ಆರೋಪಿ

ಕೃತ್ಯ ಎಸಗಿದ ನಂತರ ಆರೋಪಿ ಚೇತನ್ ತನ್ನ ಆಲ್ಟೋ ಕಾರಿನಲ್ಲಿ ಮಂಗಳೂರಿನ ಕಡೆಗೆ ಪರಾರಿಯಾಗಿದ್ದಾನೆ. ಈ ಮಧ್ಯೆ ಆತ ಲಾವಣ್ಯ ತಂದೆಗೆ ಕರೆ ಮಾಡಿ, “ನಾನು ನಿಮ್ಮ ಮಗಳನ್ನು ಕೊಂದಿದ್ದೇನೆ, ಈಗ ನಾನೂ ಸಹ ಜೀವನ ಕೊನೆಗೊಳಿಸಿಕೊಳ್ಳುತ್ತೇನೆ” ಎಂದು ಹೇಳಿದ್ದ ಎನ್ನಲಾಗಿದೆ. ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಲರ್ಟ್ ಆದ ಬಂಟ್ವಾಳ ಉಪವಿಭಾಗದ ಪೊಲೀಸರು ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ತೀವ್ರಗೊಳಿಸಿದ್ದರು. ಮೊಬೈಲ್ ನೆಟ್‌ವರ್ಕ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ವಾಮಂಜೂರು ಪಚ್ಚನಾಡಿ ಬಳಿ ಆರೋಪಿಯನ್ನು ಕಾರು ಸಮೇತ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ ಬೆಂಗಳೂರು: 2 ವರ್ಷದ ಮಗು ಅನುಮಾನಾಸ್ಪದ ಸಾವು, ಲಿವ್-ಇನ್ ಸಂಬಂಧದಲ್ಲಿದ್ದ ದಂಪತಿ ವಿರುದ್ಧ ಅನುಮಾನ

ತಿಂಗಳ ಹಿಂದೆಯೇ ನಡೆದಿತ್ತು ಗಲಾಟೆ

ಪೊಲೀಸ್ ಮೂಲಗಳ ಪ್ರಕಾರ, ಒಂದು ತಿಂಗಳ ಹಿಂದೆಯೂ ಆರೋಪಿ ಚೇತನ್ ಲಾವಣ್ಯ ಕೆಲಸ ಮಾಡುತ್ತಿದ್ದ ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ್ದ. ಆ ಸಂದರ್ಭದಲ್ಲಿ ಆಸ್ಪತ್ರೆಯ ಇತರ ಸಿಬ್ಬಂದಿ ಮಧ್ಯಪ್ರವೇಶಿಸಿ ಆತನನ್ನು ತಡೆದಿದ್ದರು. ಆದರೆ, ಆ ಸಮಯದಲ್ಲಿ ಯಾವುದೇ ಅಧಿಕೃತ ಪೊಲೀಸ್ ದೂರು ದಾಖಲಾಗದೆ ಇರುವುದು ಈ ದುರಂತಕ್ಕೆ ಕಾರಣವಾಯಿತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *