
ಚಿಕ್ಕಮಗಳೂರು, ಏಪ್ರಿಲ್ 4: ಮದುವೆ ವಯಸ್ಸು ಮೀರಿದರೂ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲ್ಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಮೃತಪಟ್ಟ ದುರ್ದೈವಿ. ಕುಮಾರ್ ಕಡೂರು ತಾಲ್ಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿ ಮಂದೆ ಬಿಟ್ಟುಕೊಂಡು ಕೆಲಸ ಮಾಡುತ್ತಿದ್ದ.
ಘಟನೆಯ ಹಿನ್ನೆಲೆ
ಇತ್ತೀಚೆಗೆ ರಾಮನವಮಿ ಹಬ್ಬಕ್ಕೆ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಕುಮಾರ್, ಮದುವೆ ಮಾಡಿಸಿ ಮಾಡುವಂತೆ ಪೋಷಕರ ಬಳಿ ಪಟ್ಟು ಹಿಡಿದಿದ್ದ. ಆದರೆ, ಪೋಷಕರು ಮೊದಲು ಇಬ್ಬರು ಅಣ್ಣಂದಿರ ಮದುವೆಯಾಗಲಿ, ನಂತರ ನಿನಗೆ ಮದುವೆ ಮಾಡುತ್ತೇವೆ ಎಂದು ತಿಳಿಸಿದ್ದರು. ಅಲ್ಲಿಯವರೆಗೆ ಕುರಿ ಮೇಯಿಸಿಕೊಂಡು ಇರುವಂತೆ ಸೂಚಿಸಿ ಮಗನನ್ನು ವಾಪಸ್ ಕಳುಹಿಸಿದ್ದರು.
ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ ಕೇಸ್ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್: ವಿಡಿಯೋ ಇರೋದು ನಿಜ, ಆದ್ರೆ… ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!
ಆದರೆ, ತನಗೆ ಮದುವೆಯಾಗುತ್ತಿಲ್ಲ ಎಂಬ ಚಿಂತೆಯಲ್ಲಿದ್ದ ಕುಮಾರ್, ಮಾನಸಿಕವಾಗಿ ಜಿಗುಪ್ಸೆಗೆ ಒಳಗಾಗಿದ್ದ. ಇದೇ ವಿಚಾರವಾಗಿ ಮನನೊಂದು ಕುಡಿದ ಮತ್ತಿನಲ್ಲಿ ತೋಟದ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.