ಚಿಕ್ಕೋಡಿ, ಜುಲೈ 4: ಕಳೆದ ಎರಡು ತಿಂಗಳಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ. ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ನದಿಗೆ ಬರೋಬ್ಬರಿ 15 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ರೈತರು ಮತ್ತು ಸಾರ್ವಜನಿಕರಲ್ಲಿ ಸಂತಸ ಮನೆ ಮಾಡಿದೆ. ಕೃಷ್ಣಾ ನದಿಯು ದಕ್ಷಿಣ ಕರ್ನಾಟಕದ ಜೀವನಾಡಿಗಳಲ್ಲಿ ಒಂದಾಗಿದೆ. ನದಿಯಲ್ಲಿ ನೀರಿಲ್ಲದೆ ನೀರಿನ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿತ್ತು. ಇದೀಗ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ನದಿಯಲ್ಲಿ ನೀರಿನ ಹರಿವು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಕಳೆದ ವಾರದಿಂದ ಮಹಾರಾಷ್ಟ್ರದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿದ್ದು, ಆ ಭಾಗದಲ್ಲಿರುವ ನದಿಗಳು ಹಾಗೂ ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕದ ಗಡಿಯೊಳಗೆ ಹರಿಯುವ ಕೃಷ್ಣಾ ನದಿಗೂ ಹೆಚ್ಚಿನ ಪ್ರಮಾಣದ ನೀರು ಬರುತ್ತಿದೆ. ಇದು ಬೆಳಗಾವಿ ಜಿಲ್ಲೆ ಸೇರಿದಂತೆ ನದಿಯ ಪಾತ್ರದಲ್ಲಿರುವ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಭರವಸೆ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ