ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9
ಬೆಂಗಳೂರು, ಜೂನ್ 20: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ (Shakti Scheme) ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಕಡಿವಾಣ ಹಾಕಲು ಸಾರಿಗೆ ಇಲಾಖೆಯು ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.
ಮುಖ್ಯಾಂಶಗಳು
- ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್.
- ವೋಟರ್ ಐಡಿ ಇದ್ದವರಿಗಷ್ಟೇ ಸ್ಮಾರ್ಟ್ ಕಾರ್ಡ್.
- ಪ್ರಾಯೋಗಿಕವಾಗಿ ಬಿಎಂಟಿಸಿಯಲ್ಲಿ ಮೊದಲು ಜಾರಿ.
ವೋಟರ್ ಐಡಿ ಕಡ್ಡಾಯ, ದುರ್ಬಳಕೆಗೆ ಬ್ರೇಕ್
ಬೇರೆ ರಾಜ್ಯಗಳ ಮಹಿಳೆಯರ ಉಚಿತ ಪ್ರಯಾಣಕ್ಕೆ ಬ್ರೇಕ್ ಹಾಕಲು ರಾಜ್ಯದ ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ಹೊಂದಿರುವವರಿಗೆ ಮಾತ್ರ ಈ ಸ್ಮಾರ್ಟ್ ಕಾರ್ಡ್ ನೀಡಲು ಸರ್ಕಾರ ಪ್ಲಾನ್ ಮಾಡಿದೆ. ಫಲಾನುಭವಿಗಳು ತಮ್ಮ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಸಲ್ಲಿಸಿ ಸ್ಮಾರ್ಟ್ ಕಾರ್ಡ್ಗಳನ್ನು ಪಡೆದುಕೊಳ್ಳಬಹುದು. ಈ ಸ್ಮಾರ್ಟ್ ಕಾರ್ಡ್ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ ಮತ್ತು ವಿಳಾಸದ ಸಂಪೂರ್ಣ ವಿವರಗಳನ್ನು ಮುದ್ರಿಸಲಾಗಿರುತ್ತದೆ. ಅತ್ಯಂತ ಪ್ರಮುಖವಾಗಿ, ಈ ಕಾರ್ಡ್ ಅನ್ನು ಇತರರಿಗೆ ವರ್ಗಾಯಿಸಲು (Transfer) ಯಾವುದೇ ಅವಕಾಶವಿರುವುದಿಲ್ಲ. ರಾಜ್ಯಾದ್ಯಂತ ಒಟ್ಟು 3 ಕೋಟಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಬೃಹತ್ ಗುರಿಯನ್ನು ಸರ್ಕಾರ ಹೊಂದಿದೆ.
ಮೆಟ್ರೋದಲ್ಲೂ ಸಂಚಾರ ಲಭ್ಯ: ಬಿಎಂಟಿಸಿಯಲ್ಲಿ ಮೊದಲ ಪ್ರಯೋಗ
ಈ ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯು ಪ್ರಾಯೋಗಿಕವಾಗಿ ಮೊದಲು ಬೆಂಗಳೂರಿನ ಬಿಎಂಟಿಸಿ (BMTC) ವ್ಯಾಪ್ತಿಯಲ್ಲಿ ಜಾರಿಗೆ ಬರಲಿದ್ದು, ತದನಂತರ ಉಳಿದ ಮೂರು ಸಾರಿಗೆ ನಿಗಮಗಳ ಮಹಿಳಾ ಪ್ರಯಾಣಿಕರಿಗೂ ವಿಸ್ತರಿಸಲಾಗುವುದು. ಬಿಎಂಟಿಸಿ ಈಗಾಗಲೇ ಗುತ್ತಿಗೆ ಆಧಾರದ ಮೇಲೆ 11,000 ಸುಧಾರಿತ ಇಟಿಎಂ (ETM) ಯಂತ್ರಗಳನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್ ಕಾರ್ಡ್ಗಳಲ್ಲಿ ಅತ್ಯಾಧುನಿಕ ಎನ್ಎಫ್ಸಿ (NFC – Near Field Communication) ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಬಸ್ಸುಗಳ ಜೊತೆಗೆ ‘ನಮ್ಮ ಮೆಟ್ರೋ’ ಸಂಚಾರಕ್ಕೂ ಇವುಗಳನ್ನು ಬಳಸಲು ಅವಕಾಶ ಕಲ್ಪಿಸಲಾಗಿದೆ.
ಉಚಿತ ವಿತರಣೆ: ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಮಹಿಳೆಯರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಈ ಸ್ಮಾರ್ಟ್ ಕಾರ್ಡ್ಗಳನ್ನು ಸಂಪೂರ್ಣ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಸಾರ್ವಜನಿಕರು ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಸೈಬರ್ ಸೆಂಟರ್ಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕಾರ್ಡ್ಗಳನ್ನು ಪಡೆದುಕೊಳ್ಳಬಹುದು. ಇದಲ್ಲದೆ ರಾಜ್ಯದ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳಲ್ಲೂ ಸ್ಮಾರ್ಟ್ ಕಾರ್ಡ್ ವಿತರಣಾ ಕೌಂಟರ್ಗಳನ್ನು ತೆರೆಯಲಾಗುತ್ತದೆ. ಸರ್ಕಾರದ ಈ ಕಠಿಣ ಕ್ರಮವನ್ನು ಮಹಿಳಾ ಪ್ರಯಾಣಿಕರು ಸ್ವಾಗತಿಸಿದ್ದು, ನಿಜವಾದ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ