ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು; ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ನಾಳೆ ಉಪವಾಸ ಸತ್ಯಾಗ್ರಹ – Kannada News

ನವದೆಹಲಿ, ಜೂನ್ 9: ಮಧ್ಯಪ್ರದೇಶದಿಂದ ರಾಜ್ಯಸಭೆಯ ಮೂರನೇ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಹಿರಿಯ ನಾಯಕಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಮ್ಮ ಅಫಿಡವಿಟ್‌ನಲ್ಲಿ ಹೈದರಾಬಾದ್ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣದ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದ್ದರಿಂದ, ಕಾಂಗ್ರೆಸ್‌ಗೆ ಈಗ ಮತ್ತೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಾಗದೆ ಆ ಸ್ಥಾನವನ್ನು ಕಳೆದುಕೊಂಡಿದೆ. ಇದರಿಂದಾಗಿ ಬಿಜೆಪಿಯ ಮೂರನೇ ಅಭ್ಯರ್ಥಿ ಮಹೇಶ್ ಕೇವತ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ, ಕಾಂಗ್ರೆಸ್ ಚುನಾವಣಾ ಆಯೋಗದ ಕಚೇರಿಯೆದುರು ಪ್ರತಿಭಟನೆ ನಡೆಸಿದೆ. ನಾಳೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿಯೂ ಘೋಷಿಸಿದೆ.

ಮೀನಾಕ್ಷಿ ನಟರಾಜನ್ (ಆರೋಪಿ ಸಂಖ್ಯೆ 4) ವಿರುದ್ಧ ಹೈದರಾಬಾದ್‌ನ ‘ನಾಲ್ಕನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್’ ನ್ಯಾಯಾಲಯದಲ್ಲಿ 2025 ರ ಆಗಸ್ಟ್‌ನಿಂದ ಕ್ರಿಮಿನಲ್ ಪ್ರಕರಣವೊಂದು ಬಾಕಿ ಇದೆ. ಬಿಎನ್‌ಎಸ್ (BNS) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಅವರಿಗೆ ನೋಟಿಸ್ ಕೂಡ ಜಾರಿ ಮಾಡಿತ್ತು. ನಾಮಪತ್ರ ಸಲ್ಲಿಕೆಯ ವೇಳೆ ಈ ಕ್ರಿಮಿನಲ್ ಪ್ರಕರಣದ ವಿವರಗಳನ್ನು ಅಫಿಡವಿಟ್‌ನಲ್ಲಿ ನಮೂದಿಸದ ಕಾರಣದಿಂದ ಬಿಜೆಪಿಯ ಮಹೇಶ್ ಕೇವತ್ ನೀಡಿದ ದೂರಿನ ಆಧಾರದ ಮೇಲೆ ಚುನಾವಣಾಧಿಕಾರಿಗಳು ನಾಮಪತ್ರವನ್ನು ವಜಾಗೊಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸೀಟು ಕಳ್ಳತನ ಮಾಡಿದೆ; ರಾಜ್ಯಸಭೆ ನಾಮಪತ್ರ ರದ್ದಾಗಿದ್ದಕ್ಕೆ ಮೀನಾಕ್ಷಿ ನಟರಾಜನ್ ಆಕ್ರೋಶ

ರಾಜ್ಯಸಭಾ ಚುನಾವಣೆಯಲ್ಲಿ ತೃತೀಯ ಪಕ್ಷದ ಪ್ರಭಾವ ಹಾಗೂ ರೆಸಾರ್ಟ್ ರಾಜಕೀಯದ ಆತಂಕದಿಂದಾಗಿ ಕಾಂಗ್ರೆಸ್ ತನ್ನ ಶಾಸಕರನ್ನು ಭೋಪಾಲ್‌ನಿಂದ ಬೆಂಗಳೂರಿಗೆ ಕರೆದೊಯ್ಯಲು ವಿಶೇಷ ವಿಮಾನದ ವ್ಯವಸ್ಥೆ ಮಾಡಿತ್ತು. ಕಾಂಗ್ರೆಸ್ ಶಾಸಕರು ವಿಮಾನವೇರಿ, ಅದು ರನ್‌ವೇನಲ್ಲಿ ಚಲಿಸಲು ಆರಂಭಿಸಿದಾಗಲೇ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಸುದ್ದಿ ಬಂದಿದೆ. ತಕ್ಷಣವೇ ಹಿರಿಯ ನಾಯಕರ ಆದೇಶದ ಮೇರೆಗೆ ವಿಮಾನವನ್ನು ರನ್‌ವೇನಿಂದಲೇ ವಾಪಸ್ ಕರೆಯಿಸಿ, ಶಾಸಕರನ್ನು ರಕ್ಷಿಸುವ ತಂತ್ರಕ್ಕೆ ಬ್ರೇಕ್ ಹಾಕಲಾಯಿತು.

ನಾಮಪತ್ರ ರದ್ದತಿಯನ್ನು ಪ್ರತಿಭಟಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸಚಿನ್ ಪೈಲಟ್ ಮತ್ತು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ನವದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಧಾವಿಸಿತು. ಸಂಜೆ 6 ಗಂಟೆಯ ನಂತರ ಕಚೇರಿಯಲ್ಲಿ ಉನ್ನತ ಅಧಿಕಾರಿಗಳು ಇಲ್ಲದ ಕಾರಣ ಅವರಿಗೆ ಒಳಗೆ ಹೋಗಲು ಬಿಡದಿದ್ದಾಗ, ಕಾಂಗ್ರೆಸ್ ನಾಯಕರು ಗೇಟ್ ಮುಂಭಾಗದಲ್ಲೇ ಧರಣಿ ಕುಳಿತು ಆಕ್ರೋಶ ಹೊರಹಾಕಿದರು. ನಂತರ ಆಯೋಗವು ಕಾಂಗ್ರೆಸ್‌ನ ಜ್ಞಾಪನಾ ಪತ್ರವನ್ನು ಸ್ವೀಕರಿಸಿದೆ.

ಇದನ್ನೂ ಓದಿ: ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ

“ಇದು ಪ್ರಜಾಪ್ರಭುತ್ವದ ಹಗಲು ದರೋಡೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯ ಕೀಳು ತಂತ್ರಗಳು ವಿಫಲವಾದಾಗ ಅವರು ಈ ಮಾರ್ಗ ಹಿಡಿದಿದ್ದಾರೆ. ನಾಮಪತ್ರದಲ್ಲಿ ತಪ್ಪು ಮುಚ್ಚಿಡಲಾಗಿದೆ ಎಂಬುದು ಸಂಪೂರ್ಣ ಸುಳ್ಳು. ನಾವು ಇದನ್ನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಬೀದಿಗಿಳಿದು ಹೋರಾಡಲಿದ್ದೇವೆ.” ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

“ನಮ್ಮ ಅಭ್ಯರ್ಥಿಯ ವಿರುದ್ಧ ಯಾವುದೇ ಎಫ್‌ಐಆರ್ (FIR) ಅಥವಾ ಚಾರ್ಜ್‌ಶೀಟ್ ಇಲ್ಲ. ಕೇವಲ ಕೋರ್ಟ್‌ನಿಂದ ಬಂದ ನೋಟಿಸ್ ಅನ್ನು ನೆಪವಾಗಿಟ್ಟುಕೊಂಡು ರಾಜ್ಯಸಭಾ ಅಭ್ಯರ್ಥಿಯೊಬ್ಬರ ನಾಮಪತ್ರ ರದ್ದು ಮಾಡಿರುವುದು ಇತಿಹಾಸದಲ್ಲೇ ಮೊದಲು.” ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:13 pm, Tue, 9 June 26

Source link

Leave a Reply

Your email address will not be published. Required fields are marked *