ಮುಂಬೈ, ಆ.12 : ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಮುಸಲಧಾರ ಮಳೆಗೆ ಭಾರಿ ಭೂಕುಸಿತ ಉಂಟಾಗಿದ್ದು, ಕನಿಷ್ಠ ಇಬ್ಬರು ಮೃತಪಟ್ಟು, ನಾಲ್ಕರಿಂದ ಐದು ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಭೀತಿ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ NDRF, ಮುಂಬೈ ಅಗ್ನಿಶಾಮಕ ದಳ ಮತ್ತು ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ನೀಡಿದ ಮಾಹಿತಿಯಂತೆ, ಘಾಟ್ಕೋಪರ್ನ ಚಿರಾಗ್ ನಗರದಲ್ಲಿರುವ ಗೌಸಿಯಾ ಚಾಲ್ ಬಳಿ ಮುಂಜಾನೆ ಸುಮಾರು 3:48ರ ವೇಳೆಗೆ ಗುಡ್ಡದ ಒಂದು ಭಾಗ ಕುಸಿದು ಬಿದ್ದಿದೆ.
ಬೆಟ್ಟದ ಮಣ್ಣು ಮತ್ತು ಕಲ್ಲುಗಳು 2 ರಿಂದ 3 ಮನೆಗಳ ಮೇಲೆ ಬಿದ್ದಿದ್ದರಿಂದ, ನಿವಾಸಿಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡರು. ಘಟನಾ ಸ್ಥಳದಿಂದ ಈವರೆಗೆ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ತಪಾಸಣೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.
ದುರಂತದಲ್ಲಿ ಗಾಯಗೊಂಡಿದ್ದ 18 ವರ್ಷದ ಸೊಹೇಲ್ ಅನ್ಸಾರಿ (ತಲೆಗೆ ಗಾಯ) ಮತ್ತು 14 ವರ್ಷದ ಮೊಹಮ್ಮದ್ ಅನ್ಸಾರಿ (ಬೆನ್ನಿಗೆ ಗಾಯ) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಗಣೇಶ್ ಶಿಂಧೆ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. “ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಾಟ್ಕೋಪರ್ ಪೊಲೀಸ್ ಠಾಣೆ ವ್ಯಾಪ್ತಿಯ ಅಶೋಕನಗರದಲ್ಲಿ ಭೂಕುಸಿತ ಸಂಭವಿಸಿದೆ. ಇದುವರೆಗೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮಣ್ಣಿನಡಿಯಲ್ಲಿ ಇನ್ನು 3 ರಿಂದ 4 ಜನರು ಸಿಲುಕಿರುವ ಸಾಧ್ಯತೆಯಿದ್ದು, NDRF, ಪೊಲೀಸರು ಹಾಗೂ ಬಿಎಂಸಿ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.” ಎಂದು ಡಿಸಿಪಿ ಗಣೇಶ್ ಶಿಂಧೆ ಹೇಳಿದ್ದಾರೆ.
ಇದನ್ನೂ ಓದಿ: ಮತ್ತೆ ಕಾಶ್ಮೀರಿ ಪಂಡಿತರ ಮೇಲೆ ಉಗ್ರರ ಕಣ್ಣು: ಮನೆಗಳಲ್ಲೇ ಇರುವಂತೆ ಸೂಚನೆ
ಮುಂಬೈ ಮೇಯರ್ ರಿತು ತಾವ್ಡೆ ಮತ್ತು ಹೆಚ್ಚುವರಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಧಾಕ್ನೆ ಅವರು ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅಪಾಯಕಾರಿ ಪ್ರದೇಶದಲ್ಲಿರುವ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
