ನೆಲಮಂಗಲ, ಜುಲೈ 01: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಮೆಡಿಕಲ್ ತ್ಯಾಜ್ಯವನ್ನು ಅಕ್ರಮವಾಗಿ ಎಸೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಮೆಡಿಕಲ್ ಶಾಪ್ಗಳ ಮಾಲೀಕರು ಎಲ್ಲೆಂದರಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಬಿಸಾಕುತ್ತಿದ್ದು, ಇದು ಆರೋಗ್ಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.
ರಸ್ತೆ ಬದಿಯಲ್ಲಿ ರಾಶಿ ಬಿದ್ದಿರುವ ಮಾತ್ರೆಗಳು, ಎಕ್ಸ್ಪೈರಿ ದಿನಾಂಕ ಮೀರಿದ ಔಷಧಗಳು, ಸಿರಂಜ್ಗಳು ಜನರು, ವಿಶೇಷವಾಗಿ ಶಾಲಾ ಮಕ್ಕಳು ಮತ್ತು ಜಾನುವಾರುಗಳ ಆರೋಗ್ಯಕ್ಕೆ ದೊಡ್ಡ ಅಪಾಯವನ್ನು ತಂದೊಡ್ಡಿವೆ. ಜಾನುವಾರುಗಳು ಈ ತ್ಯಾಜ್ಯವನ್ನು ಸೇವಿಸಿ ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ಅವರು, ಈ ಅಕ್ರಮ ವಿಲೇವಾರಿಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಿದ್ದಾರೆ. ಹಾಗೆಯೇ, ನೆಲಮಂಗಲ ತಾಲೂಕು ವೈದ್ಯಾಧಿಕಾರಿಗಳಿಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ. ಆದರೆ, ಈ ಹಿಂದೆ ಕೂಡ ಇಂತಹ ಘಟನೆಗಳು ವರದಿಯಾಗಿದ್ದರೂ, ಅಧಿಕಾರಿಗಳಿಂದ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
