ಮೈಸೂರು, ಜುಲೈ 21: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು ಪ್ರತ್ಯೇಕ ಭೀಕರ ಘಟನೆಗಳಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಹಲವು ಆರೋಪಿಗಳನ್ನು ಬಂಧಿಸಿದ್ದಾರೆ.
ಟಿ. ನರಸೀಪುರದಲ್ಲಿ ಘಟನೆ
ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಟಿ. ನರಸೀಪುರದ ಖಾಸಗಿ ಬಸ್ ನಿಲ್ದಾಣದ ಬಳಿ ಇದ್ದ ಯುವತಿಯನ್ನು ಮೂವರು ಆರೋಪಿಗಳು ಅಪಹರಿಸಿದ್ದರು. ಬಳಿಕ ಚಾಮರಾಜನಗರ ತಾಲೂಕಿನ ಸಂತೆಮರಳ್ಳಿಯ ಲಾಡ್ಜ್ವೊಂದಕ್ಕೆ ಕರೆದೊಯ್ದು ಆಕೆಯ ಮೇಲೆ ಗ್ಯಾಂಗ್ರೇಪ್ ಎಸಗಿದ್ದರು. ಘಟನೆ ನಡೆದ 24 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಟಿ. ನರಸೀಪುರ ಪೊಲೀಸರು ಸ್ಥಳೀಯ ನಿವಾಸಿಗಳಾದ ಕಿರಣ್, ಕಿಶೋರ್ ಮತ್ತು ರಿಯಾನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ!
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ಸಮಯವನ್ನು ಕಾಯ್ದು 23 ವರ್ಷದ ಯುವಕನೊಬ್ಬ ಮನೆಗೆ ನುಗ್ಗಿ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಕೂಗಾಟ ಕೇಳಿ ಓಡಿಬಂದ ಅಕ್ಕಪಕ್ಕದ ಮನೆಯವರು ಆರೋಪಿಯನ್ನು ಕೃತ್ಯದ ಸ್ಥಳದಲ್ಲೇ ಹಿಡಿದು, ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ದೇವಸ್ಥಾನಕ್ಕೆಂದು ಪುಸಲಾಯಿಸಿ ಕರೆದೊಯ್ದು ಅಪ್ರಾಪ್ತೆ ಮೇಲೆ ಗ್ಯಾಂಗ್ರೇಪ್!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 17ರ ರಾತ್ರಿ ನಡೆದಿದ್ದ ದೌರ್ಜನ್ಯದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೇಣುಕಾ ಎಂಬ ಮಹಿಳೆ ಅಪ್ರಾಪ್ತ ಬಾಲಕಿಗೆ ದೇವಸ್ಥಾನಕ್ಕೆ ಹೋಗೋಣವೆಂದು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದಿದ್ದಳು. ಬಳಿಕ ನವೀನ್ ಮತ್ತು ವೆಂಕಟರಮಣ ಎಂಬುವರ ಜೊತೆ ಸೇರಿ ಬಾಲಕಿಗೆ ಮದ್ಯ ಕುಡಿಸಿ, ನಿರ್ಮಾಣ ಹಂತದ ಕಟ್ಟಡದಲ್ಲಿ ಇಡೀ ರಾತ್ರಿ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ನಡೆಸಿದ್ದರು.
ಇದನ್ನೂ ಓದಿ SIR ಪ್ರಕ್ರಿಯೆ ವೇಳೆ ಕರ್ತವ್ಯನಿರತ ಸಿಬ್ಬಂದಿಗೆ ನಿಂದನೆ, ಬೆದರಿಕೆ: FIR ದಾಖಲು!
ಮರುದಿನ ಬೆಳಿಗ್ಗೆ ಮನೆ ಬಳಿ ಬಿಟ್ಟು, ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ತಾಯಿಯ ಪ್ರಶ್ನೆಗೆ ಬಾಲಕಿ ನಡೆದ ಘಟನೆಯನ್ನು ತಿಳಿಸಿದ್ದು, ದೂರು ದಾಖಲಿಸಿಕೊಂಡ ದೇವನಹಳ್ಳಿ ಪೊಲೀಸರು ನವೀನ್, ವೆಂಕಟರಮಣ ಮತ್ತು ರೇಣುಕಾ ಮೂವರನ್ನೂ ಬಂಧಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
