ಬೆಂಗಳೂರು, ಮೇ,26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನವದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಕರ್ನಾಟಕದ ಜನತೆಗೆ ಸಿಕ್ಕ ಜಯ ಎಂದು ಹೇಳಿದರು. ಸುಪ್ರೀಂ ಕೋರ್ಟ್ನ ತೀರ್ಪಿನ ಪ್ರತಿಯು ತಮಗೆ ಕ್ಷಣಮಾತ್ರದಲ್ಲಿ ದೊರೆತಿದ್ದು, ಮೂವರು ನ್ಯಾಯಾಧೀಶರ ಪೀಠವು ಈ ಅರ್ಜಿಯನ್ನು ಪರಿಶೀಲಿಸಿ ತಿರಸ್ಕರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ತೀರ್ಪು ಕರ್ನಾಟಕದ ಪಾಲಿಗೆ ಶುಭಸುದ್ದಿಯಾಗಿದ್ದು, ರಾಜ್ಯದ ಪರವಾಗಿ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು ಹೇಳಿದರು. ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಕರ್ನಾಟಕದ ಪರವಾಗಿಯೇ ಇತ್ತು. ಇದೀಗ ತಮಿಳುನಾಡಿನ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವುದರಿಂದ, ಮೇಕೆದಾಟು ಯೋಜನೆಯನ್ನು ಮುಂದುವರಿಸಲು ಕರ್ನಾಟಕಕ್ಕೆ ಹೆಚ್ಚಿನ ಅನುಕೂಲವಾಗಿದೆ. ನಾವು ಈಗಾಗಲೇ ಹೊಸ ಡಿಪಿಆರ್ ಸಲ್ಲಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಅವರು ವಿವರಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
