ಬೆಂಗಳೂರು, (ಜೂನ್ 19): ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಸಿಲೆಂಡರ್ ದರ ಏರಿಕೆ ಬೆನ್ನಲ್ಲೇ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಇದೀಗ ಕರ್ನಾಟಕದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಚರ್ಚೆಗಳು ನಡೆದಿವೆ. ಹೀಗಾಗಿ ಸಾರ್ವಜನಿಕರಿಗೆ ಮತ್ತೊಂದು ಬೆಲೆ ಏರಿಕೆ ಆತಂಕ ಶುರುವಾಗಿದೆ. ಹೌದು…ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ. ಇಮದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಪ್ರಗತಿ ಪರಿಶೀಲನೆ ವೇಳೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳು ಪ್ರಸ್ತಾಪಿಸಿವೆ.
ಡೀಸೆಲ್ ದರ ಮತ್ತು ಸಿಬ್ಬಂದಿ ಹೆಚ್ಚಳವಾಗಿದೆ. ಜೊತೆಗೆ ಸಿಬ್ಬಂದಿ ವೇತನ ಬಾಕಿ 1,271 ಕೋಟಿ ರೂಪಾಯಿ ಪೈಕಿ 450 ಕೋಟಿ ರೂ. ಬಿಡುಗಡೆ ಆಗಿದೆ. ಆದ್ದರಿಂದ ಪ್ರಯಾಣದ ದರ ಹೆಚ್ಚಳಕ್ಕೆ ಅನುಮತಿ ಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿವೆ. 2025ರ ಜನವರಿ 5ರಂದು ಬಸ್ ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಡೀಸೆಲ್ ಬೆಲೆ ಏರಿಕೆಯಿಂದ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂದು ಕಾದುನೋಡಬೇಕಿದೆ.