ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು? – Kannada News | Centre permits Karnataka to procure 1.01 lakh tonnes of Bengal gram

ನವದೆಹಲಿ, (ಜನವರಿ 23): ಸಂಕಷ್ಟಿತ ಸಮಯದಲ್ಲಿ ಸದಾ ಕರ್ನಾಟಕದ (Karnataka) ರೈತರ ಬೆನ್ನಿಗೆ ನಿಲ್ಲುತ್ತಿರುವ ಕೇಂದ್ರ ಸರ್ಕಾರ, ಇದೀಗ ರಾಜ್ಯದ ಕಡಲೆ (Bengal gram) ಬೆಳೆಗಾರರ ಬೆಂಬಲಕ್ಕೂ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಮನವಿ ಮೇರೆಗೆ ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು ಎಂದಿದೆ.

ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ  5875 ರೂ. ದರದಲ್ಲಿ ಒಟ್ಟು 101340 MT ಹಿಂಗಾರು ಹಂಗಾಮಿನ ಕಡಲೆ ಕಾಳು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಸಚಿವ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್; ಜನವರಿ 24ಕ್ಕೆ ಭರ್ಜರಿ ಕಾರ್ಯಕ್ರಮ

ಗಮನ ಸೆಳೆದಿದ್ದ ಪ್ರಲ್ಹಾದ ಜೋಶಿ

ಕರ್ನಾಟಕದ ಪ್ರಮುಖ ದ್ವಿದಳ ಧಾನ್ಯಗಳಲ್ಲಿ ಕಡ್ಲೆಯೂ ಒಂದಾಗಿದ್ದು, ಸುಮಾರು 9.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಉತ್ಪಾದನೆ ಹೊಂದಿದೆ. ಆದರೆ, ಪ್ರಸ್ತುತ ಮಾರುಕಟ್ಟೆ ಬೆಲೆಗಿಂತ ತೀರಾ ಕಡಿಮೆ ಬೆಲೆಯಿಂದಾಗಿ ಕಡಲೆ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ ಬೆಂಬಲ ಬೆಲೆಯಲ್ಲಿ ಖರೀದಿಗೆ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು.

ಕಡಲೆಗೆ ಪ್ರಸ್ತುತ ಮಾರುಕಟ್ಟೆ ಬೆಲೆ RMS 2026-27ಕ್ಕೆ ಘೋಷಿಸಲಾದ ಪ್ರತಿ ಕ್ವಿಂಟಲ್‌ಗೆ ₹ 5,875ರ MSP ಗಿಂತ ತುಂಬಾ ಕಡಿಮೆಯಾಗಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಕಡಲೆ ಬೆಲೆ ಮತ್ತಷ್ಟು ಕುಸಿಯುವ ಆತಂಕವಿದೆ. ಆದ್ದರಿಂದ, ಕರ್ನಾಟಕದಲ್ಲಿ ಕಡಲೆ(ಚಾನಾ)ಗೆ ಬೆಂಬಲ ಬೆಲೆ ಯೋಜನೆ (PSS) ಅನ್ನು ಆದ್ಯತೆ ಮೇರೆಗೆ ಜಾರಿಗೆ ತರುವ ಅವಶ್ಯಕತೆಯಿದೆ ಎಂದು ಪ್ರಲ್ಹಾದ ಜೋಶಿ ಕೃಷಿ ಸಚಿವರಿಗೆ ಮನದಟ್ಟು ಮಾಡಿಕೊಟ್ಟಿದ್ದರು.

ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿದ ಕೃಷಿ ಸಚಿವರು ರಾಜ್ಯದ ರೈತರ ಹಿತದೃಷ್ಟಿಯಿಂದ 1 ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಅನುಮೋದನೆ ನೀಡಿದ್ದಾರೆ.

ಕೂಡಲೇ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ಈ ಕೂಡಲೇ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಂದ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಜೋಶಿ ಒತ್ತಾಯಿಸಿದ್ದಾರೆ.

ಪ್ರಧಾನಿ-ಕೃಷಿ ಸಚಿವರಿಗೆ ಧನ್ಯವಾದ

ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿಗೆ ಅನುಮತಿ ನೀಡುವ ಮೂಲಕ ರಾಜ್ಯದ ರೈತರ ನೆರವಿಗೆ ಬಂದಿರುವ ಪ್ರಧಾನಿ ನರೇಂದ್ರ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ ಅವರಿಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *