ನವದೆಹಲಿ, ಜುಲೈ 4: ಅಯೋಧ್ಯೆಯ ರಾಮಮಂದಿರಕ್ಕೆ ಬಂದ ದೇಣಿಗೆಯಲ್ಲಿ ದುರುಪಯೋಗ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಶ್ರೀರಾಮನ ಮೇಲಿನ ಭಕ್ತಿಯನ್ನು ಕುಗ್ಗಿಸಲು ಕೆಲವು ಶಕ್ತಿಗಳು ಯತ್ನಿಸುತ್ತಿವೆಯೇ? ಎಂಬ ಪ್ರಶ್ನೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅತ್ಯಂತ ಚುಟುಕಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾಗ್ಪುರದಲ್ಲಿ ಸುದ್ದಿಗಾರರು ಈ ವಿವಾದದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ, ಮೋಹನ್ ಭಾಗವತ್ ಅವರು ಕೇವಲ “ರಾಮ್-ರಾಮ್” ಎಂದು ಹೇಳಿ ಅಲ್ಲಿಂದ ಚುರುಕಾಗಿ ಜಾಗ ಖಾಲಿ ಮಾಡಿದ್ದಾರೆ.
ಈ ವಿವಾದದ ಬಗ್ಗೆ ಶುಕ್ರವಾರ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಈ ಘಟನೆಯಿಂದ ಆರ್ಎಸ್ಎಸ್ ಅತ್ಯಂತ ತೀವ್ರ ಆಘಾತ ಮತ್ತು ಆಕ್ರೋಶಗೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದರು. ಈ ವಿವಾದವು ಭಕ್ತರ ಭಾವನೆಗಳಿಗೆ ಧಕ್ಕೆ ತಂದಿರುವುದರಿಂದ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದನ್ನು ಅಸಾಧಾರಣ ಪ್ರಕರಣವೆಂದು ಪರಿಗಣಿಸಬೇಕು. ಮಂದಿರದ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೊಸಬಾಳೆ ಒತ್ತಿಹೇಳಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 8 ಜನರನ್ನು ಬಂಧಿಸಲಾಗಿದೆ. ಇವರಲ್ಲಿ ಭಕ್ತರ ಕಾಣಿಕೆಗಳನ್ನು ಎಣಿಸುವ ಕೆಲಸದಲ್ಲಿದ್ದ 6 ಮಂದಿ ಹೊರಗುತ್ತಿಗೆ ನೌಕರರು ಮತ್ತು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ರಾಮ್ ಶಂಕರ್ ಯಾದವ್ ಅಲಿಯಾಸ್ ಟಿನ್ನು ಸೇರಿದ್ದಾರೆ. ಬಂಧಿತ ಹೊರಗುತ್ತಿಗೆ ನೌಕರರಲ್ಲಿ ಅವಿನಾಶ್ ಶುಕ್ಲಾ ಕೂಡ ಒಬ್ಬನಾಗಿದ್ದಾನೆ.
(Video Source: ANI)
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ