ನವದೆಹಲಿ, ಜುಲೈ 23: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಹಾಗೂ ತ್ವರಿತ ಶಿಕ್ಷೆ ಖಚಿತಪಡಿಸಲು ‘ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಪರೀಕ್ಷಾ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸಂಪೂರ್ಣ ಸಿದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ವಿರೋಧ ಪಕ್ಷಗಳ ಪ್ರಚಾರ ಶೈಲಿ ಮತ್ತು ಸರ್ಕಾರದ ಬದ್ಧತೆಯ ಕುರಿತು ಪ್ರಮುಖ ವಿವರಗಳನ್ನು ಹಂಚಿಕೊಂಡಿದ್ದಾರೆ.
ನಾವು ಸಂಸತ್ತಿನಲ್ಲಿ ಚರ್ಚೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಆರಂಭದಲ್ಲಿ ಚರ್ಚೆ ಬೇಕು ಎಂದು ಕೇಳುತ್ತಿದ್ದ ವಿರೋಧ ಪಕ್ಷದ ನಾಯಕರು, ಈಗ ಚರ್ಚೆಗೆ ಬರದಂತೆ ನಾನಾ ಷರತ್ತುಗಳನ್ನು ವಿಧಿಸಲು ಪ್ರಾರಂಭಿಸಿದ್ದಾರೆ ಎಂದು ಸಚಿವರು ಟೀಕಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಅತ್ಯಂತ ಕಾಳಜಿ ಮತ್ತು ಸಂವೇದನಾಶೀಲತೆ ಹೊಂದಿದೆ. ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಹಾಗೂ ದೇಶದ ಯುವಜನತೆಯ ಭವಿಷ್ಯ ‘ವಿಕಸಿತ ಭಾರತ 2047’ಕನಸಿನ ಪ್ರಮುಖ ಭಾಗವಾಗಿದೆ ಎಂದು ಹೇಳಿದರು.
ಈಗಾಗಲೇ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿದ್ದ 14 ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇಂತಹ ಅಕ್ರಮಗಳನ್ನು ಒಟ್ಟಾಗಿ ನಿಯಂತ್ರಿಸುವುದು ಹೇಗೆ ಎಂಬ ಬಗ್ಗೆ ಎಲ್ಲರ ಸಲಹೆ-ಸಹಕಾರದೊಂದಿಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ