ಕಾಂಗ್ರೆಸ್ನ ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿImage Credit source: tv9
ಕೊಪ್ಪಳ, ಜುಲೈ 2: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಮತ್ತೊಂದೆಡೆ, ಆಡಳಿತಾರೂಢ ಕಾಂಗ್ರೆಸ್ನ (C0ngress) ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಸ್ವಪಕ್ಷದ ಸರ್ಕಾರದ ಆಡಳಿತಾತ್ಮಕ ಲೋಪಗಳನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ಗುರುವಾರ ಮಾತನಾಡಿದ ಅವರು, ‘ಸರ್ಕಾರ ಅಂದಮೇಲೆ ನ್ಯೂನತೆಗಳು ಸಾಕಷ್ಟಿರುತ್ತವೆ’ ಎನ್ನುವ ಮೂಲಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪಗಳಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಸದ್ಯ 2 ಲಕ್ಷ ಅರ್ಹ ಫಲಾನುಭವಿಗಳಿಗೆ ತಾಂತ್ರಿಕ ಕಾರಣಗಳಿಂದ ಹಣ ತಲುಪುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸತ್ತವರ ಖಾತೆಗೂ ಹೋಗ್ತಿದೆ ಹಣ, ಸರ್ಕಾರಿ ನೌಕರರ ಮನೆಗೂ ಗೃಹಜ್ಯೋತಿ!
ಗ್ಯಾರಂಟಿ ಯೋಜನೆಗಳ ಸಾಂಖ್ಯಿಕ ವಿವರ ನೀಡಿದ ಶಾಸಕ ರಾಯರೆಡ್ಡಿ, ‘ಗೃಹಲಕ್ಷ್ಮಿ ಯೋಜನೆಯಡಿ ನಾವು ಒಟ್ಟು 1 ಕೋಟಿ 26 ಲಕ್ಷ ಜನರಿಗೆ ಹಣ ನೀಡಬೇಕು. ಆದರೆ ಪ್ರಸ್ತುತ ದಾಖಲಾತಿ ದೋಷ ಹಾಗೂ ತಾಂತ್ರಿಕ ಸಮಸ್ಯೆಗಳಿಂದಾಗಿ 1 ಕೋಟಿ 24 ಲಕ್ಷ ಜನರಿಗೆ ಮಾತ್ರ ಹಣ ತಲುಪುತ್ತಿದ್ದು, 2 ಲಕ್ಷ ಜನರಿಗೆ ಹಣ ಸಿಗುತ್ತಿಲ್ಲ. ಪ್ರತಿ ತಿಂಗಳು ಭ್ರಷ್ಟಾಚಾರ ರಹಿತವಾಗಿ ನೇರವಾಗಿ 2,500 ಕೋಟಿ ರೂ. ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಆದರೆ ಪ್ರಸ್ತುತ ಪರಿಷ್ಕರಣೆ ನಡೆಸುತ್ತಿರುವುದಕ್ಕೆ ಮುಖ್ಯ ಕಾರಣವೆಂದರೆ, ರಾಜ್ಯದಲ್ಲಿ ಹಲವು ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದೆ. ಇನ್ನು ಗೃಹಜ್ಯೋತಿ ಯೋಜನೆಯಡಿ 1 ಕೋಟಿ 68 ಲಕ್ಷ ಜನರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಇದರಲ್ಲಿ ಕೆಲವು ಸರ್ಕಾರಿ ನೌಕರರ ಮನೆಗಳೂ ಸೇರಿವೆ. ಹೀಗಾಗಿ ಅನರ್ಹರನ್ನು ಗುರುತಿಸಲು ಪರಿಷ್ಕರಣೆ ಅನಿವಾರ್ಯವಾಗಿದೆ’ ಎಂದು ಹೇಳಿದ್ದಾರೆ.
ಯಾರೇ ಸಿಎಂ ಆದ್ರೂ ಗ್ಯಾರಂಟಿ ನಿಲ್ಲಲ್ಲ, ಡಿಕೆಶಿಗೂ ಬದ್ಧತೆ ಇದೆ: ರಾಯರೆಡ್ಡಿ
ಪ್ರತಿ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 52,ವಿಷಯ ಸಾವಿರ ಕೋಟಿ ರೂ. ಹಣ ನೀಡುವುದು ಅನಿವಾರ್ಯವಾಗಿದ್ದು, ಇದನ್ನು ಬದಲಾಯಿಸಲು ಸಾಧ್ಯವಿಲ್ಲ. ಡಿಕೆ ಶಿವಕುಮಾರ್ ಈಗ ಮುಖ್ಯಮಂತ್ರಿ ಆಗಿದ್ದಾರೆ. ಗ್ಯಾರಂಟಿಗಳನ್ನು ಮುಂದುವರಿಸಿಕೊಂಡು ಹೋಗುವ ಬದ್ಧತೆ ಅವರಿಗಿದೆ. ಇದು ಯಾವುದೇ ವ್ಯಕ್ತಿಯ ವೈಯಕ್ತಿಕ ಕಾರ್ಯಕ್ರಮವಲ್ಲ, ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ಯಾರೇ ಮುಖ್ಯಮಂತ್ರಿಯಾದರೂ ಯೋಜನೆಗಳು ನಿಲ್ಲುವುದಿಲ್ಲ ಎಂದು ರಾಯರೆಡ್ಡಿ ಭರವಸೆ ನೀಡಿದರು.
ಇದನ್ನೂ ಓದಿ: ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ 2028ರ ಚುನಾವಣೆಗೆ ಮಾಹಿತಿ ಸಂಗ್ರಹ: ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ
ಇದೇ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ವಿರೋಧ ಪಕ್ಷದವರು ಸರಿಯಾಗಿ ಸ್ಟಡಿ ಮಾಡುತ್ತಿಲ್ಲ, ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಸರ್ಕಾರವನ್ನು ಎಲ್ಲಿ ಹಿಡಿಯಬೇಕೋ ಅಲ್ಲಿ ಹಿಡಿಯುತ್ತಿಲ್ಲ’ ಎಂದು ಲೇವಡಿ ಮಾಡಿದರು. ಅಲ್ಲದೆ, ಇನ್ನು ಒಂದು ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನೀಡಲಾಗುವುದು ಎಂದು ರಾಯರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
