ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ ರಾಜಕೀಯ ಹಿಂಸಾಚಾರಕ್ಕೆ ಬಿಜೆಪಿ ಪ್ರಭಾವಿ ನಾಯಕ ಸುವೆಂದು ಅಧಿಕಾರಿ ಆಪ್ತ ಚಂದ್ರನಾಥ್ ರಥ್ ಹತ್ಯೆಯಾಗಿದ್ದಾರೆ. ಅವರನ್ನು ಬುಧವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಆದರೆ, ಅಸಲಿಗೆ ದುಷ್ಕರ್ಮಿಗಳ ಗುರಿ ಸುವೇಂದು ಅಧಿಕಾರಿಯೇ ಆಗಿದ್ದರೇ ಎಂಬ ಅನುಮಾನ ಇದೀಗ ಬಲವಾಗಿದೆ. ಅಲ್ಲದೆ, ಈ ಘಟನೆಯು ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಉತ್ತರ 24 ಪರಗಣ ಜಿಲ್ಲೆಯ ಮಧ್ಯಗ್ರಾಮದಲ್ಲಿ ಬುಧವಾರ ತಡರಾತ್ರಿ ಚಂದ್ರನಾಥ್ ಕಾರಿನಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದಾಗ, ಎಂಟು ಮಂದಿ ದುಷ್ಕರ್ಮಿಗಳು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಏರ್ಪೋರ್ಟ್ ಬಳಿ ಕಾರನ್ನು ಅಡ್ಡಗಟ್ಟಿದ ಹಂತಕರು, ಚಂದ್ರನಾಥ್ ಅವರ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುರಿ ಇಟ್ಟು ಮನಸೋ ಇಚ್ಛೆ ಗುಂಡು ಹಾರಿಸಿದ್ದಾರೆ. ಅತಿ ಹತ್ತಿರದಿಂದ ಗುಂಡು ತಗುಲಿದ ಪರಿಣಾಮ ಚಂದ್ರನಾಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಹತ್ಯೆಯು ಪೂರ್ವಯೋಜಿತವಾಗಿದ್ದು, ಇದಕ್ಕಾಗಿ ಆಸ್ಟ್ರಿಯಾ ಮೂಲದ ಪಿಸ್ತೂಲ್ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸುವೆಂದು ಅಧಿಕಾರಿ ಅವರ ಪರವಾಗಿ ಭವಾನಿಪುರದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದ ಚಂದ್ರನಾಥ್ ಅವರನ್ನೇ ಟಾರ್ಗೆಟ್ ಮಾಡಿ ಈ ಕೃತ್ಯ ಎಸಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
