ಹಾಸನ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್‌ಪ್ರೆಸ್: ಶಿರಾಡಿಘಾಟ್ ಮಾರ್ಗದಲ್ಲಿ ಯಶಸ್ವಿ ಪ್ರಾಯೋಗಿಕ ಸಂಚಾರ – Kannada News | Bengaluru Mangaluru Vande Bharat Trial Run Successful via Sakleshpur

ಹಾಸನ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್‌ಪ್ರೆಸ್

ಹಾಸನ, ಆಗಸ್ಟ್ 12: ಜಿಲ್ಲೆಯ ಜನರ ಬಹುದಿನಗಳ ಕನಸು ಕೊನೆಗೂ ನನಸಾಗುವತ್ತ ಹೆಜ್ಜೆ ಇಟ್ಟಿದೆ. ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರವು (ಟ್ರಯಲ್ ರನ್) ಹಾಸನ ಜಿಲ್ಲೆಯ ಸಕಲೇಶಪುರ ನಿಲ್ದಾಣದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದವರೆಗೆ ಯಶಸ್ವಿಯಾಗಿ ಆರಂಭಗೊಂಡಿದೆ. ಅತ್ಯಂತ ಕಠಿಣ ಹಾಗೂ ತಿರುವುಗಳಿಂದ ಕೂಡಿದ ಶಿರಾಡಿಘಾಟ್ ಮಾರ್ಗದಲ್ಲಿ ಈ ರೈಲು ಸಂಚರಿಸುವ ಮೂಲಕ ಇತಿಹಾಸ ಬರೆದಿದೆ.

ಟ್ರಯಲ್ ರನ್ ಪ್ರಕ್ರಿಯೆ ಚಾಲನೆಯಲ್ಲಿ

ಸಕಲೇಶಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ್ ರೈಲಿಗೆ ಸ್ಥಳೀಯ ಶಾಸಕರಾದ ಸಿಮೆಂಟ್ ಮಂಜು ಅವರು ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಭಾಗದಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಶಾಸಕರು ರೈಲ್ವೆ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ನಿರಂತರವಾಗಿ ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ಸಕಲೇಶಪುರ ಮಾರ್ಗದವರೆಗಿನ ರೈಲ್ವೆ ವಿದ್ಯುದ್ದೀಕರಣ ಕಾಮಗಾರಿಗಳು ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ಈಗ ಟ್ರಯಲ್ ರನ್ ಪ್ರಕ್ರಿಯೆ ಚಾಲನೆಯಲ್ಲಿದೆ.

ಈ ವಿಶೇಷ ವಂದೇ ಭಾರತ್ ರೈಲು 20 ಬೋಗಿಗಳನ್ನು ಹೊಂದಿದ್ದು, ಏಕಕಾಲಕ್ಕೆ 1,080 ಪ್ರಯಾಣಿಕರು ಅತ್ಯಂತ ಸುಖಕರವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಘಾಟ್ ಪ್ರದೇಶದ ಕಡಿದಾದ ಇಳಿಜಾರಿನಲ್ಲಿ ಸುರಕ್ಷಿತವಾಗಿ ಚಲಿಸಲು ಈ ರೈಲಿನಲ್ಲಿ ಅತ್ಯಾಧುನಿಕ ‘ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್’ (AEB) ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ಐಷಾರಾಮಿ ಸಾರಿಗೆ ವ್ಯವಸ್ಥೆ

ಬೆಂಗಳೂರು ಹಾಗೂ ಕರಾವಳಿ ಭಾಗದ ಪ್ರಯಾಣಿಕರಿಗೆ ಇನ್ನು ಮುಂದೆ ಅತ್ಯಂತ ವೇಗದ ಮತ್ತು ಐಷಾರಾಮಿ ಸಾರಿಗೆ ವ್ಯವಸ್ಥೆ ಸಿಗಲಿದೆ. ಈ ಪ್ರಾಯೋಗಿಕ ಸಂಚಾರ ಯಶಸ್ವಿಯಾದ ಬೆನ್ನಲ್ಲೇ, ಶೀಘ್ರದಲ್ಲೇ ಈ ರೈಲು ಸಾರ್ವಜನಿಕರ ಸೇವೆಗೆ ಮುಕ್ತವಾಗುವ ಸಾಧ್ಯತೆ ಇದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರತಿದಿನ ನಿಯಮಿತವಾಗಿ ಸಂಚಾರ ಆರಂಭಿಸಲಿ ಎಂಬುದು ಹಾಸನ ಹಾಗೂ ಕರಾವಳಿ ಜಿಲ್ಲೆಗಳ ಪ್ರಯಾಣಿಕರ ತೀವ್ರ ಆಶಯವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *