ಹಾಸ್ಟೆಲ್ ಶೌಚಾಲಯದಲ್ಲೇ ಕುಸಿದುಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು!
ತುಮಕೂರು, ಆಗಸ್ಟ್ 09: ತಾಲೂಕಿನ ರಂಗಸಮುದ್ರ ಗ್ರಾಮದ ಬಳಿ ಇರುವ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್ನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಕಾರಗಾನಹಟ್ಟಿ ಗ್ರಾಮದ ನಿವಾಸಿಗಳಾದ ನರಸಿಂಹಮೂರ್ತಿ ಮತ್ತು ಶಾರದಮ್ಮ ದಂಪತಿಯ 14 ವರ್ಷದ ಪುತ್ರಿ ಪ್ರಿಯಾಂಕಾ ಮೃತಪಟ್ಟ ದುರ್ದೈವಿ. ಈಕೆ ರಂಗಸಮುದ್ರದ ತ್ರಿಯಂಬಕೇಶ್ವರ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು ಎನ್ನಲಾಗಿದೆ.
ಅನಾರೋಗ್ಯದ ಬೆನ್ನಲ್ಲೇ ಸಂಭವಿಸಿದ ದುರಂತ
ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕಾ ಚಿಕಿತ್ಸೆಗಾಗಿ ತನ್ನ ಸ್ವಗ್ರಾಮಕ್ಕೆ ತೆರಳಿದ್ದಳು. ಗುಣಮುಖಳಾದ ಬಳಿಕ ಆಗಸ್ಟ್ 7ರಂದು ಆಕೆ ಮರಳಿ ಹಾಸ್ಟೆಲ್ಗೆ ಬಂದಿದ್ದಳು. ಆದರೆ, ಶನಿವಾರ ಮುಂಜಾನೆ ಹಾಸ್ಟೆಲ್ನ ಶೌಚಾಲಯಕ್ಕೆ ತೆರಳಿದ್ದ ವೇಳೆ ದಿಢೀರನೆ ರಕ್ತದೊತ್ತಡ ಕಡಿಮೆಯಾಗಿ (ಲೋ ಬಿಪಿ) ಅಸ್ವಸ್ಥಗೊಂಡು ಶೌಚಾಲಯದಲ್ಲೇ ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಹಾಸ್ಟೆಲ್ ಸಿಬ್ಬಂದಿ ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ಮೂಲಭೂತ ಸೌಕರ್ಯಗಳ ಕೊರತೆ ಆರೋಪ; ಅಧಿಕಾರಿಗಳ ಭೇಟಿ
ಘಟನೆಯ ಬೆನ್ನಲ್ಲೇ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲ ಎಂದು ಸಾರ್ವಜನಿಕರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಾವಗಡ ತಹಶೀಲ್ದಾರ್ ವೈ. ರವಿ ಹಾಗೂ ಪಾವಗಡ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಮರಣೊತ್ತರ ಪರೀಕ್ಷೆಯನ್ನು ನಡೆಸಿ, ಬಾಲಕಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಪಾವಗಡದ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
