ಬೆಂಗಳೂರು, ಜುಲೈ 14: ಬಿಜೆಪಿಯ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ರಾಮಚಂದ್ರ ಗೌಡ ಅವರು ಜನಸಂಘದ ಕಾಲದಿಂದಲೂ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟುವಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದರು.
ಜನಸಂಘದ ಕಾಲದ ಧೀಮಂತ ನಾಯಕ
ರಾಮಚಂದ್ರ ಗೌಡ ಅವರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಇಂದಿನ ಬಲಿಷ್ಠ ಸ್ಥಿತಿಗೆ ತಲುಪುವಲ್ಲಿ ಇವರ ಕೊಡುಗೆ ಅಪಾರ. ಮುಂಚಿನ ಜನಸಂಘದ ಅವಧಿಯಿಂದಲೇ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿದ್ದ ಅವರು, ತಳಮಟ್ಟದಿಂದ ಸಂಘಟನೆಯನ್ನು ಬಲಪಡಿಸಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದ ಗೌಡರು, ತಮ್ಮ ಆಡಳಿತ ಚಾತುರ್ಯ ಮತ್ತು ದಕ್ಷತೆಯಿಂದ ಗುರುತಿಸಿಕೊಂಡಿದ್ದರು. ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದುದು.
ಭಾವನಾತ್ಮಕವಾಗಿ ಸ್ಮರಿಸಿದ ಬಿಎಸ್ ವೈ
ರಾಮಚಂದ್ರ ಗೌಡ ಅವರ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ತಮ್ಮ ಒಡನಾಟವನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ರಾಮಚಂದ್ರ ಗೌಡರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ನಾನು ನನ್ನ ಮತ್ತೊಬ್ಬ ಸಹೋದರನನ್ನು ಕಳೆದುಕೊಂಡಂತಾಗಿದೆ. ಜನಸಂಘದ ದಿನಗಳಿಂದ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ದಿನಗಳು, ಹಗಲಿರುಳು ಶ್ರಮಿಸಿ ರಾಜ್ಯಾದ್ಯಂತ ಪಕ್ಷ ಕಟ್ಟಿದ ನೆನಪುಗಳು ಕಣ್ಣಮುಂದೆ ಸುಳಿಯುತ್ತಿವೆ. ನನ್ನ ಸಂಪುಟದ ಸಹೋದ್ಯೋಗಿಯಾಗಿ ಅವರ ಆಡಳಿತ ಚಾತುರ್ಯ ಹಾಗೂ ಬದ್ಧತೆಯನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಮತ್ತೋರ್ವ ಸೋದರನನ್ನು ನಾನು ಕಳೆದುಕೊಂಡಿದ್ದೇನೆ. ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶ್ರೀ ರಾಮಚಂದ್ರ ಗೌಡರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಜನಸಂಘದ ದಿನಗಳಿಂದಲೂ ಹೆಗಲಿಗೆ ಹೆಗಲು ಕೊಟ್ಟು, ಹಗಲಿರುಳು ಶ್ರಮಿಸಿ, ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಜೊತೆಯಾಗಿ ಕಟ್ಟಿದ ಹೋರಾಟದ ದಿನಗಳು… pic.twitter.com/GHqxysv9nP
— B.S.Yediyurappa (@BSYBJP) July 14, 2026
ರಾಮಚಂದ್ರ ಗೌಡರ ನಿಧನವು ರಾಜ್ಯ ರಾಜಕಾರಣಕ್ಕೆ ಹಾಗೂ ವಿಶೇಷವಾಗಿ ಬಿಜೆಪಿ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರು ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖ ನಾಯಕರು ಮೃತರ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ