Headlines

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್ – Kannada News | Hubballi Sub Jail Video Goes Viral: Undertrial Prisoners Seen Consuming Liquor and Ganja Days After DGP Alok Kumar’s Visit

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್Image Credit source: tv9

ಹುಬ್ಬಳ್ಳಿ, ಫೆಬ್ರವರಿ 21: ಧಾರವಾಡ (Dharawad) ಜಿಲ್ಲೆ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಕೇಳಿಬಂದಿದ್ದು, ಜೈಲಿನೊಳಗಿನ ಅಕ್ರಮ ಸೌಲಭ್ಯಗಳ ವಿಡಿಯೋ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಣ ಕೊಟ್ಟರೆ ಸಬ್ ಜೈಲಿನಲ್ಲಿ ಎಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬ ಆರೋಪಗಳು ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿವೆ. ವೈರಲ್ ಆಗಿರುವ ವಿಡಿಯೋದಲ್ಲಿ ವಿಚಾರಣಾಧೀನ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವುದು, ಸೆಲ್ಫಿ ತೆಗೆದುಕೊಳ್ಳುತ್ತಿರುವುದು, ಗಾಂಜಾ ಹಾಗೂ ಮದ್ಯ ಸೇವನೆ ಮಾಡುತ್ತಿರುವುದು ಕಾಣಿಸುತ್ತಿದೆ. ಜೈಲಿನಲ್ಲೇ ಬಿಂದಾಸ್ ಜೀವನ ನಡೆಸುತ್ತಿರುವಂತೆ ಕಂಡುಬರುವ ಈ ದೃಶ್ಯಗಳು ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಜೈಲಿನೊಳಗೆ ಯಾವುದೇ ಅಂಜಿಕೆ ಇಲ್ಲದೇ ಕೈದಿಗಳು ವರ್ತಿಸುತ್ತಿರುವುದು ಆಡಳಿತದ ಮೇಲಿನ ಅನುಮಾನಗಳನ್ನು ಮತ್ತಷ್ಟು ಗಾಢಗೊಳಿಸಿದೆ.

ಈ ಉಪ ಕಾರಾಗೃಹದಲ್ಲಿ ಕಳೆದ ವರ್ಷ ನವೆಂಬರ್ 13ರಂದು ನಡೆದಿದ್ದ ಮಲ್ಲಿಕ್ ಕೊಲೆ ಪ್ರಕರಣದ ಆರೋಪಿಗಳು ಸೇರಿದಂತೆ ಅನೇಕ ಗಂಭೀರ ಪ್ರಕರಣಗಳಲ್ಲಿ ಶಾಮೀಲಾದ ಆರೋಪಿಗಳು ಇದ್ದಾರೆ. ಬೆಂಡಿಗೇರಿ ಠಾಣೆ ಪೊಲೀಸರು ಈ ಪ್ರಕರಣ ಸಂಬಂಧ 17 ಜನರನ್ನು ಬಂಧಿಸಿದ್ದರು. ವೈರಲ್ ವಿಡಿಯೋದಲ್ಲಿ ಅಭಿಷೇಕ್ ಜಾಧವ್, ಗಣೇಶ್ ಜಾಧವ್ ಸೇರಿದಂತೆ ಕೆಲ ಆರೋಪಿಗಳು ಕಾಣಿಸಿಕೊಂಡಿರುವುದಾಗಿ ಹೇಳಲಾಗುತ್ತಿದೆ.

ವಿಡಿಯೋ ಇಲ್ಲಿ ನೋಡಿ

ಗಮನಾರ್ಹವೆಂದರೆ, ಮೂರು ದಿನಗಳ ಹಿಂದಷ್ಟೇ ರಾಜ್ಯದ ಡಿಜಿಪಿ ಅಲೋಕ್ ಕುಮಾರ್ ಹುಬ್ಬಳ್ಳಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಉಪ ಕಾರಾಗೃಹಕ್ಕೆ ಭೇಟಿ ನೀಡಿದ್ದರು. ಜೈಲಿನ ಕಾರ್ಯವೈಖರಿ, ಭದ್ರತಾ ವ್ಯವಸ್ಥೆ, ಸಬ್ ಜೈಲ್ ಕಟ್ಟಡ, ಗಾರ್ಡನ್ ಹಾಗೂ ಕೈದಿಗಳಿಗೆ ಒದಗಿಸಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ್ದರು. ಕೈದಿಗಳ ಜೊತೆಯೂ ಮಾತುಕತೆ ನಡೆಸಿದ್ದರು. ಆದರೆ ಅವರ ಭೇಟಿಯ ಮೂರೇ ದಿನಗಳಲ್ಲಿ ಜೈಲಿನೊಳಗಿನ ಅಕ್ರಮ ಚಟುವಟಿಕೆಗಳ ವಿಡಿಯೋ ವೈರಲ್ ಆಗಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಕಲ್ಲು, ಚಪ್ಪಲಿ ತೂರಾಟದ ಬಳಿಕ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಶಾಂತಿ ಸಭೆ ವಿಫಲ, ಎಲ್ಲಾ ಆರೋಪಿಗಳ ಬಂಧನಕ್ಕೆ ಡೆಡ್​ಲೈನ್

ಜೈಲಿನೊಳಗೆ ಗಾಂಜಾ, ಮದ್ಯ, ಮೊಬೈಲ್‌ಗಳ ಪೂರೈಕೆ ಹೇಗೆ ನಡೆಯುತ್ತಿದೆ? ಇದಕ್ಕೆ ಒಳಗಿನಿಂದ ಸಹಕಾರವಿದೆಯೇ? ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಸಂಬಂಧಿತ ಅಧಿಕಾರಿಗಳು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ವಿಡಿಯೋ ನೈಜತೆಯ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *