ಕೊಪ್ಪಳ,ಮಾ.4 : ಬಣ್ಣಗಳ ಹಬ್ಬ ಹೋಳಿ ಹುಣ್ಣಿಮೆಯನ್ನು ಸಡಗರದಿಂದ ಆಚರಿಸಿದ ಇಬ್ಬರು ಯುವಕರು, ಹಚ್ಚಿದ್ದ ಬಣ್ಣವನ್ನು ತೊಳೆದುಕೊಳ್ಳಲು ಕೆರೆಗೆ ಇಳಿದಾಗ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಗಂಗಾವತಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ನಡೆದಿದೆ. ಇನ್ನು ಮೃತ ಯುವಕರನ್ನು ಗಂಗಾವತಿ ನಗರದ ಗಾಂಧಿನಗರ ನಿವಾಸಿಗಳಾದ ಅಭಿಷೇಕ್ ಮತ್ತು ಸೂರ್ಯ ಎಂದು ಗುರುತಿಸಲಾಗಿದೆ. ಹೋಳಿ ಹಬ್ಬದ ಪ್ರಯುಕ್ತ ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದ್ದ ಈ ಯುವಕರು, ಮಧ್ಯಾಹ್ನದ ನಂತರ ಸ್ನಾನ ಮಾಡಲು ಸಣಾಪುರ ಗ್ರಾಮದ ಕೆರೆಗೆ ತೆರಳಿದ್ದರು. ಕೆರೆಯಲ್ಲಿ ಈಜಲು ಇಳಿದಾಗ ನೀರಿನ ಆಳ ತಿಳಿಯದೆ ಇಬ್ಬರೂ ಮುಳುಗಿದ್ದಾರೆ. ಯುವಕರು ನೀರುಪಾಲಾಗುತ್ತಿದ್ದಂತೆಯೇ ಆತಂಕಗೊಂಡ ಸ್ಥಳೀಯರು ತಕ್ಷಣವೇ ಶೋಧ ಕಾರ್ಯ ಆರಂಭಿಸಿದ್ದಾರೆ. ಸದ್ಯ ಸಾಣಾಪುರ ಕೆರೆಯಲ್ಲಿ ಮೃತದೇಹಗಳಿಗಾಗಿ ಸ್ಥಳೀಯ ಈಜುಗಾರರ ಸಹಾಯದಿಂದ ಹುಡುಕಾಟ ಮುಂದುವರಿದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಬ್ಬದ ದಿನವೇ ಇಬ್ಬರು ಯುವಕರನ್ನು ಕಳೆದುಕೊಂಡ ಗಾಂಧಿನಗರದಲ್ಲಿ ಈಗ ಸ್ಮಶಾನ ಮೌನ ಆವರಿಸಿದ್ದು, ಪೋಷಕರ ಕ್ರಂದನ ಮುಗಿಲು ಮುಟ್ಟಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
