’25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ’; ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ – Kannada News | Over 25 Crore People Lifted Out Of Poverty President Droupadi Murmu Addresses Nation On Independence Day Eve

ನವದೆಹಲಿ, ಆಗಸ್ಟ್ 14: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಆಗಸ್ಟ್ 14) ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ದೇಶ-ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೂ ಶುಭಾಶಯ ಕೋರಿದರು. ಇದೇ ಮೊದಲ ಬಾರಿ ರಾಷ್ಟ್ರಪತಿಗಳ ಭಾಷಣಕ್ಕೂ ಮುನ್ನ ‘ವಂದೇ ಮಾತರಂ’ ಗೀತೆ ಮೊಳಗಿತು. ನಂತರ ರಾಷ್ಟ್ರಗೀತೆಯಾದ ‘ಜನ ಗಣ ಮನ’ವನ್ನು ಪ್ರಸಾರ ಮಾಡಲಾಯಿತು.

“ದೇಶದಲ್ಲಿ 25 ಕೋಟಿಗೂ ಹೆಚ್ಚು (250 ಮಿಲಿಯನ್) ಜನರನ್ನು ಬಡತನದಿಂದ ಹೊರತರಲಾಗಿದೆ. ಹೆಣ್ಣುಮಕ್ಕಳ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲಾಗಿದೆ. ಉಚಿತ ಧಾನ್ಯ ಯೋಜನೆಯ ಮೂಲಕ 80 ಕೋಟಿ (800 ಮಿಲಿಯನ್) ಜನರಿಗೆ ಆಹಾರ ಭದ್ರತೆಯನ್ನು ಖಚಿತಪಡಿಸಲಾಗಿದೆ. ‘ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ’ (PM-JAY)ಯಡಿ 60 ಕೋಟಿ ಜನರಿಗೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.

ಪರೀಕ್ಷಾ ಅಕ್ರಮ ತಡೆಗೆ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ:

ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯುವ ಹಾಗೂ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ, ಸುರಕ್ಷಿತ ಮತ್ತು ವಿಶ್ವಾಸಾರ್ಹವಾಗಿಸುವ ಉದ್ದೇಶದಿಂದ ಸರ್ಕಾರವು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಲು ಸಮಗ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಇದನ್ನೂ ಓದಿ: ನಮ್ಮ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು: ರಾಷ್ಟ್ರಪತಿ ದ್ರೌಪದಿ ಮುರ್ಮು ಗಣರಾಜ್ಯೋತ್ಸವ ಸಂದೇಶ

“ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ, ಈ ರಾಷ್ಟ್ರೀಯ ಹಬ್ಬದ ಸವಿನೆನಪಿನಲ್ಲಿ ನಿಮ್ಮೆಲ್ಲರಿಗೂ ನನ್ನ ಹೃದಯಪೂರ್ವಕ ಅಭಿನಂದನೆಗಳು. ಇನ್ನು ಕೆಲವೇ ಗಂಟೆಗಳಲ್ಲಿ ನಮ್ಮ ದೇಶವು ಸ್ವಾತಂತ್ರ್ಯದ 80ನೇ ವರ್ಷಕ್ಕೆ ಕಾಲಿಡಲಿದೆ. ದೇಶ ವಿದೇಶಗಳಲ್ಲಿರುವ ಭಾರತೀಯರು ಸ್ವಾತಂತ್ರ್ಯ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತಾರೆ. ತ್ರಿವರ್ಣ ಧ್ವಜವು ನಮ್ಮ ಸ್ವತಂತ್ರತೆಯ ಸಂಕೇತವಾಗಿದ್ದು, ಅದನ್ನು ಹೆಮ್ಮೆಯಿಂದ ಹಾರಿಸಲಾಗುತ್ತದೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

“ಆಗಸ್ಟ್ 15, 1947ರಂದು ಭಾರತ ಮಾತೆಯು ಗುಲಾಮಗಿರಿಯ ಸಂಕೋಲೆಗಳಿಂದ ಮುಕ್ತಳಾದಳು. ಪ್ರಜೆಗಳೇ ಸ್ವತಂತ್ರ ಭಾರತದ ಭವಿಷ್ಯದ ಶಿಲ್ಪಿಗಳಾದರು. ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಪ್ರತಿಯೊಬ್ಬರೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು ಮತ್ತು ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಇದೇ ಸ್ವಾತಂತ್ರ್ಯದ ನಿಜವಾದ ಅರ್ಥ” ಎಂದು ಅವರು ಕರೆ ನೀಡಿದರು.

ರಾಷ್ಟ್ರ ನಿರ್ಮಾತೃಗಳಿಗೆ ಶ್ಲಾಘನೆ:

ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ವಿದ್ಯಾರ್ಥಿಗಳು, ಶಿಕ್ಷಕರು, ವಿಜ್ಞಾನಿಗಳು, ಎಂಜಿನಿಯರ್‌ಗಳು, ವೈದ್ಯರು, ಆರೋಗ್ಯ ಕಾರ್ಯಕರ್ತರು, ಶ್ರಮಿಕರು ಮತ್ತು ರೈತರ ಕೊಡುಗೆಯನ್ನು ರಾಷ್ಟ್ರಪತಿ ಮುರ್ಮು ಮುಕ್ತಕಂಠದಿಂದ ಶ್ಲಾಘಿಸಿದರು. ಅಲ್ಲದೆ, ಕ್ರೀಡಾಪಟುಗಳು, ಕಲಾಕಾರರು, ಬುದ್ಧಿಜೀವಿಗಳು, ಖಾಸಗಿ ಮತ್ತು ಸಾರ್ವಜನಿಕ ವಲಯದ ಉದ್ಯೋಗಿಗಳು, ಜನಪ್ರತಿನಿಧಿಗಳು, ನ್ಯಾಯಾಂಗದ ಸದಸ್ಯರು, ನಾಗರಿಕ ಸೇವಕರು, ಹೂಡಿಕೆದಾರರು, ಸಮಾಜ ಸೇವಕರು ಮತ್ತು ಸ್ವಚ್ಛತಾ ಕಾರ್ಯಕರ್ತರ ಶ್ರಮವನ್ನು ಅವರು ಸ್ಮರಿಸಿದರು.

ಇದನ್ನೂ ಓದಿ: Independence Day 2026: 79 ಅಥವಾ 80? ಸ್ವಾತಂತ್ರ್ಯ ದಿನಾಚರಣೆಯ ಲೆಕ್ಕಾಚಾರದಲ್ಲಿ ನಿಮಗೂ ಗೊಂದಲವಿದೆಯೇ? ಇಲ್ಲಿದೆ ಸ್ಪಷ್ಟ ಉತ್ತರ!

ಮೂರೂ ಸೇನಾ ಪಡೆಗಳು, ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಪೊಲೀಸರ ನಿಸ್ವಾರ್ಥ ಸೇವೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶೇಷವಾಗಿ ಶ್ಲಾಘಿಸಿದರು. ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಮತ್ತು ಪ್ರತಿಷ್ಠೆಯನ್ನು ಹೆಚ್ಚಿಸುತ್ತಿರುವ ಅನಿವಾಸಿ ಭಾರತೀಯರಿಗೆ ಹಾಗೂ ಸಂವಿಧಾನದ ಮೂಲಭೂತ ಕರ್ತವ್ಯಗಳನ್ನು ಪಾಲಿಸುತ್ತಿರುವ ನಾಗರಿಕರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಜವಾಬ್ದಾರಿಗಳನ್ನು ಉಲ್ಲೇಖಿಸಿದ ಅವರು, ಶಾಸಕಾಂಗದಲ್ಲಿ ಜನಪ್ರತಿನಿಧಿಗಳು ಜನರ ಆಶೋತ್ತರಗಳನ್ನು ಧ್ವನಿಸಬೇಕು, ಕಾರ್ಯಾಂಗವು ಸಾರ್ವಜನಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ನೀತಿಗಳನ್ನು ಜಾರಿಗೊಳಿಸಬೇಕು ಹಾಗೂ ನ್ಯಾಯಾಂಗವು ಸಂಪನ್ಮೂಲಗಳ ಕೊರತೆಯಿಂದಾಗಿ ಯಾರಿಗೂ ನ್ಯಾಯ ನಿರಾಕರಣೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:45 pm, Fri, 14 August 26

Source link

Leave a Reply

Your email address will not be published. Required fields are marked *