ಬೆಂಗಳೂರು, ಜು.29: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಭೀತಿ ಎದುರಾಗಿರುವ ಸಂದರ್ಭದಲ್ಲಿ, ಕಾವೇರಿ ನ್ಯಾಯಾಧಿಕರಣದ ಆದೇಶವು ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ತಮಿಳುನಾಡಿಗೆ ನೀರು ಬಿಡುವ ಆದೇಶದ ನಡುವೆ, ಹಾಸನ ಜಿಲ್ಲೆಯ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟ ಅತ್ಯಂತ ಕಡಿಮೆ ಇದೆ. ಒಟ್ಟು 37 ಟಿಎಂಸಿ ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಪ್ರಸ್ತುತ ಕೇವಲ 24.195 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 35-36 ಟಿಎಂಸಿ ನೀರಿತ್ತು ಮತ್ತು ಜಲಾಶಯ ಎರಡು ಬಾರಿ ಭರ್ತಿಯಾಗಿತ್ತು. ಈ ಬಾರಿ ಜಲಾಶಯಕ್ಕೆ ಕೇವಲ 5,690 ಕ್ಯೂಸೆಕ್ ಒಳಹರಿವು ಇದ್ದು, ಕಳೆದ ವರ್ಷದ 14,935 ಕ್ಯೂಸೆಕ್ಗೆ ಹೋಲಿಸಿದರೆ ಇದು ತೀರಾ ಕಡಿಮೆ. ನೀರಿನ ಕೊರತೆಯಿಂದಾಗಿ ಈ ಬಾರಿ ಕಾಲುವೆಗಳಿಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳ ಲಕ್ಷಾಂತರ ರೈತರು ಈ ಜಲಾಶಯದ ನೀರನ್ನು ನಂಬಿ ಕೃಷಿ ಮಾಡುತ್ತಾರೆ. ಕುಡಿಯುವ ನೀರಿಗೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗುವ ಆತಂಕ ಇರುವಾಗ ತಮಿಳುನಾಡಿಗೆ ನೀರು ಬಿಡುವುದು ಅಸಾಧ್ಯ ಎಂದು ರೈತರು ಹೋರಾಟ ಆರಂಭಿಸಿದ್ದಾರೆ. ತಮ್ಮ ಹಿತಾಸಕ್ತಿಗಳನ್ನು ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸಬಾರದು ಎಂಬುದು ರೈತರ ಪ್ರಮುಖ ಆಗ್ರಹವಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ