ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು!
ನೆಲಮಂಗಲ, ಫೆಬ್ರವರಿ 22: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ನಾಗಸಂದ್ರದ ಪೂರನ್ ಜ್ಯುವೆಲರ್ಸ್ನಲ್ಲಿ ಚಿನ್ನ ಖರೀದಿ ನೆಪದಲ್ಲಿ ಬಂದಿದ್ದ ಕಳ್ಳನು (Gold Theft) ಅಟೆಂಶನ್ ಡೈವರ್ಶನ್ ತಂತ್ರ ಬಳಸಿ ಸುಮಾರು 3 ಲಕ್ಷ ರೂ. ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಮಹೇಂದ್ರ ಅವರ ಮಾಲಿಕತ್ವದ ಅಂಗಡಿಯಲ್ಲಿ ಉಂಗುರ ತೂಕ ತೋರಿಸುವಂತೆ ಕೇಳಿ ಗಮನ ಬೇರೆಡೆ ಸೆಳೆದ ಕಳ್ಳ, ಅಸಲಿ ಉಂಗುರ ಬದಲು ನಕಲಿ ಉಂಗುರವನ್ನು ಟ್ರೇನಲ್ಲಿ ಇಟ್ಟು ಪರಾರಿಯಾಗಿದ್ದಾನೆ. ಕಳ್ಳನ ಕೈಚಳ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಳ್ಳತನ ಮಾಡಲು ಬಂದವನಿಗೆ ಹಿಗ್ಗಾಮುಗ್ಗಾ ಥಳಿತ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ ಐವರು ಕದೀಮರಲ್ಲಿ ಒಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹಾಸನದ ಚನ್ನರಾಯಪಟ್ಟಣದ ಗಾಂಧಿ ಸರ್ಕಲ್ನಲ್ಲಿ ನಡೆದಿದೆ. ಕಾರಿನಲ್ಲಿ ಬಂದಿದ್ದ ಗ್ಯಾಂಗ್, ಮನೆಯ ಲಾಕ್ ಮುರಿಯಲು ಡ್ರ್ಯಾಗರ್ ಸೇರಿದಂತೆ ಉಪಕರಣಗಳನ್ನು ತಂದಿತ್ತು ಎನ್ನಲಾಗಿದೆ. ಮನೆ ಮಾಲೀಕ ಸಂತೋಷ್ ಮೊಬೈಲ್ನಲ್ಲಿ ಸಿಸಿಟಿವಿ ದೃಶ್ಯ ಗಮನಿಸಿ ತಕ್ಷಣ ಸ್ನೇಹಿತರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕಳ್ಳರನ್ನು ಹಿಡಿಯಲು ಯತ್ನಿಸಿದಾಗ ಮೂವರು ಪರಾರಿಯಾಗಿದ್ದು, ಒಬ್ಬನನ್ನು ಹಿಡಿದ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಸ್ಥಾನದ ಹುಂಡಿ ಹಣ ಕಳವು
ಮತ್ತೊಂದೆಡೆ ದೇಗುಲದಲ್ಲಿ ಕಳ್ಳತನ ನಡೆದಿರುವ ಘಟನೆ ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೈಸೂರು–ಬೆಂಗಳೂರು ರಸ್ತೆಯಲ್ಲಿರುವ ಷಷ್ಠಿ ಸುಬ್ರಮಣ್ಯ ಸ್ವಾಮಿ ದೇಗುಲದ ಬೀಗ ಮುರಿದು ಒಳನುಗ್ಗಿದ ಖದೀಮರು, ದೇವಾಲಯದ ಗೋಲಕವನ್ನು ಹೊರಗೆ ತೆಗೆದುಕೊಂಡು ಹೋಗಿ ಒಡೆದು ಹಣ ಕಳವು ಮಾಡಿದ್ದಾರೆ. ಘಟನೆ ಬೆಳಗ್ಗೆ ತಿಳಿದುಬಂದಿದ್ದು, ಸ್ಥಳಕ್ಕೆ ಮೇಟಗಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಕಳ್ಳರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.