ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ನಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ಪರ 27 ವರ್ಷದ ಶುಭಂ ಪುಂಡೀರ್ ಅಜೇಯ ಶತಕ ಬಾರಿಸಿ ತಂಡವನ್ನು ಸುಭದ್ರ ಸ್ಥಿತಿಗೆ ಕೊಂಡೊಯ್ದಿದ್ದಾರೆ. ಶುಭಂ ಪುಂಡೀರ್ 186 ನೇ ಎಸೆತದಲ್ಲಿ ಬೃಹತ್ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿದರು. ಇದೀಗ ಶುಭಂ ರಣಜಿ ಟ್ರೋಫಿ ಫೈನಲ್ನಲ್ಲಿ ಶತಕ ಗಳಿಸಿದ ಜಮ್ಮು ಮತ್ತು ಕಾಶ್ಮೀರದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶುಭಂ ಪುಂಡಿರ್ 186 ಎಸೆತಗಳಲ್ಲಿ 10 ಬೌಂಡರಿ ಮತ್ತು ಎರಡು ಸಿಕ್ಸರ್ಗಳನ್ನು ಬಾರಿಸಿ ಶತಕ ಪೂರೈಸಿದರು. ಇದು ರಣಜಿ ಟ್ರೋಫಿ ನಾಕೌಟ್ ಪಂದ್ಯದಲ್ಲಿ ಅವರ ಮೊದಲ ಶತಕ ಮತ್ತು ಅವರ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ ಅವರ ನಾಲ್ಕನೇ ಶತಕವಾಗಿದೆ. ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್ನಲ್ಲಿ ಶುಭಂ ಪುಂಡಿರ್ ಅವರ ಬ್ಯಾಟ್ ಈ ಹಿಂದೆ ಮೌನವಾಗಿತ್ತು ಎಂಬುದನ್ನು ಗಮನಿಸಬೇಕಾದ ಸಂಗತಿ. ಆ ಎರಡು ಪಂದ್ಯಗಳ ನಾಲ್ಕು ಇನ್ನಿಂಗ್ಸ್ಗಳಲ್ಲಿ ಅವರು ಕೇವಲ 40 ರನ್ ಬಾರಿಸಿದ್ದರು. ಆದಾಗ್ಯೂ, ಫೈನಲ್ನಂತಹ ಭವ್ಯ ವೇದಿಕೆಯಲ್ಲಿ ಶತಕ ಗಳಿಸುವ ಮೂಲಕ, ಶುಭಂ ಪುಂಡಿರ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಪ್ರಸ್ತುತ ರಣಜಿ ಟ್ರೋಫಿ ಆವೃತ್ತಿಯಲ್ಲಿ ಇದು ಅವರ ಎರಡನೇ ಶತಕವಾಗಿದೆ.
ಶುಭಂ ಪುಂಡೀರ್ ಅವರ ಶತಕದಿಂದಾಗಿ, ಜಮ್ಮು ಮತ್ತು ಕಾಶ್ಮೀರ ತಂಡವು ಕರ್ನಾಟಕ ವಿರುದ್ಧದ ಫೈನಲ್ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಮೊದಲ ದಿನದಾಟದ ಅಂತ್ಯಕ್ಕೆ 2 ವಿಕೆಟ್ಗೆ 284 ರನ್ ಗಳಿಸಿದೆ. ಶುಭಂ ಪುಂಡೀರ್ ಮೊದಲ ದಿನ 117 ರನ್ ಗಳಿಸಿ ಅಜೇಯರಾಗಿ ಉಳಿದರೆ, ಅವರ ಜೊತೆಗೆ, ಜಮ್ಮು ಮತ್ತು ಕಾಶ್ಮೀರದ ಅತ್ಯಂತ ಯಶಸ್ವಿ ಬ್ಯಾಟ್ಸ್ಮನ್ ಅಬ್ದುಲ್ ಸಮದ್ 52 ರನ್ ಗಳಿಸಿ ಅಜೇಯರಾಗಿದ್ದಾರೆ. ಆದ್ದರಿಂದ, ಜಮ್ಮು ಮತ್ತು ಕಾಶ್ಮೀರ ತಂಡವು ಎರಡನೇ ದಿನವೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ