ಗದಗ, (ಫೆಬ್ರವರಿ 25): ಲೋಕಾಯುಕ್ತ (Lokayukta) ಅಧಿಕಾರಿಗಳ ದಾಳಿ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani) ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರುನಾಯಕ್ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಸದ್ಯ ಮೂವರನ್ನು ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿದೆ. ಇದರ ಬೆನ್ನಲ್ಲೇ ಇದೀಗ ಗದಗ (Gadag) ಶಹರ ಠಾಣೆ ASI ಚನ್ನಬಸಪ್ಪ ಇಂಗಳಳ್ಳಿ ಸಹ ಲೋಕಾಯುಕ್ತ ಬಲೆಬಿದ್ದಿದ್ದಾರೆ. ಪಿಟಿಷನ್ ಅರ್ಜಿ ವಿಚಾರಣೆಗೆ ಲಂಚ 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಗದಗ ಶಹರ ಪೊಲೀಸ್ ಠಾಣೆಯ ಎಎಸ್ಐ ಚೆನ್ನಬಸಪ್ಪ ಇಂಗಳಳ್ಳಿ ಅವರು ಪಿಟಿಷನ್ ಅರ್ಜಿ ವಿಚಾರಣೆಗೆ ಸುಮಾರು ಹತ್ತು ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವೀರೇಶ ಪೂಜಾರ್ ಎಂಬುವರು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಈ ದೂರಿನ ಹಿನ್ನೆಲೆ, ಇಂದು (ಫೆಬ್ರವರಿ 25) ಪೊಲೀಸ್ ಠಾಣೆಯಲ್ಲಿ ಹತ್ತು ಸಾವಿರ ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಲಾಕ್ ಆಗಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದ ತಂಡ ದಾಳಿ ಮಾಡಿದೆ.
ಇದನ್ನೂ ಓದಿ: ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO
ಇನ್ನೊಂದೆಡೆ ಚಿಕ್ಕಮಗಳೂರಿನಲ್ಲೂ ಸಹ ಲೋಕಾಯುಕ್ತ ದಾಳಿ ನಡೆಸಿದ್ದು, ಲಂಚ ಪಡೆಯುವಾಗ ಪಿಡಿಓ ಬಲೆಗೆ ಬಿದ್ದಿದ್ದಾರೆ. ಸೈಟ್ ಒಂದಕ್ಕೆ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ ಹಣ ಸ್ವೀಕರಿಸುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಂಜುಂಡಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ತಿಮ್ಮಶೆಟ್ಟಿ ಎನ್ನುವರು ಲೋಕಾಯಯಕ್ತ ಪೋಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೊನ್ನೆ ಮೊನ್ನೆಯಷ್ಟೇ ಇದೇ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಸುಮಾರು ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿದ್ದರು. ಈ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ, ಇಂತಹ ಘಟನೆಗಳಿಂದ ಎಚ್ಚರಗೊಳ್ಳದ ಕೆಲ ಲಂಚಬಾಕ ಅಧಿಕಾರಿಗಳು ಜನರಿಂದ ಲಂಚ ಸ್ವೀಕರಿಸುವುದನ್ನು ಮುಂದುವರಿಸಿದ್ದಾರೆ. ಇನ್ನು ಲಂಚಬಾಕ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಹ ಸಮರ ಸಾರಿದ್ದಾರೆ.