ಪ್ರಾತಿನಿಧಿಕ ಚಿತ್ರImage Credit source: varthabharati
ಬೆಂಗಳೂರು, ಮಾರ್ಚ್ 01: ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ (Police transfers) ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಲಕ್ಷಾಂತರ, ಕೋಟ್ಯಂತರ ರೂ ಲಂಚ ಪಡೆದು ಅಥವಾ ರಾಜಕಾರಣಿಗಳಿಗೆ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಡಿಜಿಟಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವಂತೆ ರಾಜ್ಯ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯನ ಗೌಡ ಬಿ.ಪಿ ಎಂಬುವವರಿಂದ ಡಿಜಿಗೆ ಪತ್ರ ಬರೆಯಲಾಗಿದೆ. ಸದ್ಯ ಈ ಪತ್ರ ಎಲ್ಲೆಡೆ ವೈರಲ್ ಆಗುತ್ತಿದೆ.
ಇತ್ತೀಚೆಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ವಿಚಾರವಾಗಿ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ. ಲಂಚ ನೀಡಿ ಪೋಸ್ಟಿಂಗ್ ಪಡೆಯಬೇಕು ಎಂಬ ವಿಚಾರ ಹರಿದಾಡುತ್ತಿದೆ. ಇದರ ಬಗ್ಗೆ ಮಾಧ್ಯಮಗಳಲ್ಲಿ ಕೂಡ ಸಾಕಷ್ಟು ಚರ್ಚೆ ಆಗಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಜಿಟಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವಂತೆ ಬ್ಯಾಟರಾಯನ ಗೌಡ ಬಿ.ಪಿ ಡಿಜಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಇನ್ನು ಇತ್ತೀಚೆಗೆ ಕೆಲವು ಅಧಿಕಾರಿಗಳನ್ನು ಡಿಜಿಟಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. A,B,C,D ಗ್ರೂಪ್ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಇಲಾಖೆಯ ಪಿಡಿಓಗಳನ್ನ ಡಿಜಿಟಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇದರ ಬಗ್ಗೆ ರಾಜಕಾರಣಿಗಳು ಸೇರಿದಂತೆ ಜನರಿಂದ ಕೂಡ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ. ಹೀಗಾಗಿ ಇದೇ ಮಾದರಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡುವಂತೆ ಸುಮಾರು 14 ನಿಬಂಧನೆಗಳನ್ನು ಬ್ಯಾಟರಾಯನ ಗೌಡ ಬಿ.ಪಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ಅನೇಕ ಪೊಲೀಸ್ ಠಾಣೆಗಳಲ್ಲಿ ಇನ್ಸ್ಪೆಕ್ಟರ್ಗಳೇ ಇಲ್ಲ! ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲು
ಪತ್ರದಲ್ಲಿ ಉಲ್ಲೇಖಿಸಿರುವ ನಿಬಂಧನೆಗಳೊಂದಿಗೆ ಡಿಜಿಟಲ್ ವಿಧಾನದಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆಯನ್ನು ಮಾಡಿದಲ್ಲಿ ಇಲಾಖೆಯಲ್ಲಿ ಪಾರದರ್ಶಕ, ರಾಜಕೀಯ ಹಸ್ತಕ್ಷೆಪರಹಿತ, ನಿಷ್ಪಕ್ಷಪಾತ, ಭ್ರಷ್ಟಾಚಾರ ರಹಿತ, ಒತ್ತಡರಹಿತ, ಸಮಗತೆ, ದಕ್ಷತೆ ಮತ್ತು ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಟ್ಟಂತೆ ಆಗುತ್ತದೆ. ಇದರಿಂದ ಸಮಾಜದಲ್ಲಿ ಇಲಾಖೆಯ ಘನತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ಡಿಜಿಟಲ್ ವಿಧಾನದಲ್ಲಿ ಕೌನ್ಸಿಲಿಂಗ್ ಮುಖಾಂತರ ವರ್ಗಾವಣೆ ಮಾಡಲು ರಾಜ್ಯ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯನ ಗೌಡ ಬಿ.ಪಿ ಕೋರಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.