
ನೆಲಮಂಗಲ, ಮಾರ್ಚ್ 28: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಬಿಕಾ ಎಂಬವರು ಸ್ನೇಹಿತೆಯೊಂದಿಗೆ ಬೇಕರಿ ಮುಂದೆ ನಿಂತು ಮಾತನಾಡುತ್ತಿದ್ದಾಗ, ಅಲ್ಲೇ ಜ್ಯೂಸ್ ಕುಡಿಯುತ್ತಿದ್ದಂತೆ ನಟಿಸಿದ ಇಬ್ಬರು ಖತರ್ನಾಕ್ ಖದೀಮರು ಕ್ಷಣಾರ್ಧದಲ್ಲಿ ಮಹಿಳೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಸರ ಎಳೆದ ರಭಸಕ್ಕೆ ಮಹಿಳೆ ನೆಲಕ್ಕುರುಳಿದ್ದಾರೆ. ಸುಮಾರು 55 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದೊಯ್ಯಲಾಗಿದೆ.
ಸರ ಕಳವಿನ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ವರದಿ: ಮಂಜುನಾಥ್, ಟಿವಿ9 ನೆಲಮಂಗಲ