ಅಲಹಾಬಾದ್, ಮೇ 2: ಅಲಹಾಬಾದ್ ಹೈಕೋರ್ಟ್ನ (Allahabad High Court) ಲಕ್ನೋ ಪೀಠವು ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಅದಕ್ಕೆ 10 ಲಕ್ಷ ರೂ. ದಂಡವನ್ನು ವಿಧಿಸಿದೆ. ಕಾರಣಗಳನ್ನು ನೀಡದೆ ವ್ಯಕ್ತಿಯನ್ನು 3 ತಿಂಗಳ ಕಾಲ ಜೈಲಿನಲ್ಲಿ ಇರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ನ್ಯಾಯಾಲಯವು ಸಂವಿಧಾನಬಾಹಿರ ಎಂದು ಘೋಷಿಸಿದೆ. ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಮತ್ತು ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಶ್ರೀವಾಸ್ತವ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.
ಈ ಅಕ್ರಮ ಬಂಧನಕ್ಕೆ ಕಾರಣರಾದ ಅಧಿಕಾರಿಗಳಿಂದ ರಾಜ್ಯ ಸರ್ಕಾರವು ಈ ದಂಡದ ಮೊತ್ತವನ್ನು ವಸೂಲಿ ಮಾಡಬಹುದು ಎಂದು ನ್ಯಾಯಾಲಯವು ನಿರ್ದೇಶಿಸಿದೆ. ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳ ಸ್ಥಿತಿಯೇ ಹೀಗಿದ್ದರೆ, ರಾಜ್ಯದ ಇತರ ಅಧಿಕಾರಿಗಳು ಯಾವ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರಬಹುದು ಎಂದು ನ್ಯಾಯಾಲಯವು ಕಳವಳ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ
ಸುಪ್ರೀಂ ಕೋರ್ಟ್ನ ವಿವಿಧ ತೀರ್ಪುಗಳನ್ನು ಉಲ್ಲೇಖಿಸಿದ ಅಲಹಾಬಾದ್ ಹೈಕೋರ್ಟ್, ಯಾವುದೇ ವ್ಯಕ್ತಿಯನ್ನು ಬಂಧಿಸಲು ಲಿಖಿತ ಆಧಾರಗಳನ್ನು ಒದಗಿಸುವುದು ಸಾಂವಿಧಾನಿಕ ಬಾಧ್ಯತೆಯಾಗಿದೆ ಎಂದು ಹೇಳಿದೆ. ಇದನ್ನು ನಿರ್ಲಕ್ಷಿಸುವುದು ನಾಗರಿಕರ ಮೂಲಭೂತ ಹಕ್ಕುಗಳ ನೇರ ಉಲ್ಲಂಘನೆಯಾಗುತ್ತದೆ ಎಂದಿದೆ.
ಮನೋಜ್ ಕುಮಾರ್ ಎಂಬುವವರನ್ನು ಜನವರಿ 27ರಂದು ಉನ್ನಾವೊ ಜಿಲ್ಲೆಯ ಅಸಿವಾನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲಾಯಿತು. ಬಂಧನದ ನಂತರ ಅವರನ್ನು 3 ತಿಂಗಳು ಜೈಲಿನಲ್ಲಿ ಇರಿಸಲಾಗಿತ್ತು. ಆದರೆ ಅವರ ವಿರುದ್ಧ ಪೊಲೀಸರು ಯಾವುದೇ ಆರೋಪಗಳನ್ನು ದಾಖಲಿಸಲು ವಿಫಲರಾಗಿದ್ದಾರೆ. ಪೊಲೀಸರಿಗೆ ಆ ವ್ಯಕ್ತಿಯ ಬಂಧನಕ್ಕೆ ಯಾವುದೇ ಸ್ಪಷ್ಟ ಕಾರಣಗಳನ್ನು ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ, ಮನೋಜ್ ಕುಮಾರ್ ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಯಾಗಿಲ್ಲದಿದ್ದರೆ ಅವರನ್ನು ತಕ್ಷಣ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ. ಪೊಲೀಸರು ಬಂಧನಕ್ಕೆ ಕಾರಣಗಳನ್ನು ನೀಡಲು ವಿಫಲವಾದರೆ ಆ ಬಂಧನ ಸಂವಿಧಾನಬಾಹಿರವಾಗಿರುತ್ತದೆ ಎಂದು ನ್ಯಾಯಪೀಠ ಹೇಳಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ