ಬೆಂಗಳೂರು, ಮಂಗಳೂರಿನಲ್ಲಿ ಡ್ರಗ್ಸ್ ಬೇಟೆ, ಒಟ್ಟೂ 16 ಕೆಜಿಗೂ ಹೆಚ್ಚು ಗಾಂಜಾ ಸೀಜ್!
ಮಂಗಳೂರು/ಬೆಂಗಳೂರು, ಮೇ 15: ರಾಜ್ಯದ ಪ್ರಮುಖ ನಗರಗಳಲ್ಲಿ ಮಾದಕ ವಸ್ತುಗಳ (Drugs) ಹಾವಳಿ ತಡೆಯಲು ಪೊಲೀಸರು ಮತ್ತು ಅಬಕಾರಿ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಕಡೆಗಳಲ್ಲಿ ಒಟ್ಟಾರೆಯಾಗಿ 16 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಪತ್ತೆಯಾಗಿವೆ.
ಮುಖ್ಯಾಂಶಗಳು
- ಮಂಗಳೂರಿನ ಮೇರಿಹಿಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರ್ಷಾದ್ ಎಂಬಾತನ ಬಂಧನ.
- ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಾಲೀಕರಿಲ್ಲದ 13.41 ಕೆಜಿ ಗಾಂಜಾ ಚೀಲ ಜಪ್ತಿ.
- ಒಟ್ಟು 26 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು.
ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ 25 ಲಕ್ಷ ಮೌಲ್ಯದ ಗಾಂಜಾ ಪತ್ತೆ
ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ರೈಲ್ವೆ ಪ್ಲಾಟ್ಫಾರ್ಮ್ನಲ್ಲಿ ಅನಾಮಧೇಯವಾಗಿ ಬಿಟ್ಟು ಹೋಗಿದ್ದ ಚೀಲವನ್ನು ತಪಾಸಣೆ ನಡೆಸಿದಾಗ 13.41 ಕೆಜಿ ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಅಬಕಾರಿ ಅಧಿಕಾರಿಗಳು ಸಾಮಾನ್ಯ ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬೀಳುವ ಭೀತಿಯಿಂದ ಪೆಡ್ಲರ್ಗಳು ಗಾಂಜಾ ಚೀಲವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಗಾಂಜಾ ಎಲ್ಲಿಂದ ಎಲ್ಲಿಗೆ ರವಾನೆಯಾಗುತ್ತಿತ್ತು ಎಂಬುದು ಇನ್ನು ತಿಳಿದುಬಂದಿಲ್ಲ. ಸದ್ಯ ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ಆರೋಪಿಗಳ ಪತ್ತೆಗೆ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಇದನ್ನೂ ಓದಿ 35 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ!
ಮಂಗಳೂರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ – ಆರೋಪಿ ಅರೆಸ್ಟ್
ಮಂಗಳೂರಿನ ಮೇರಿಹಿಲ್ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕಾವೂರು ಠಾಣೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಉಳ್ಳಾಲ ಮುಕ್ಕಚೇರಿ ನಿವಾಸಿ ಇರ್ಷಾದ್ ಬಂಧಿತ ಆರೋಪಿ. ಬಂಧಿತನಿಂದ ಅಂದಾಜು 1.56 ಲಕ್ಷ ರೂ. ಮೌಲ್ಯದ 3.13 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಡ್ರಗ್ ಜಾಲದ ಹಿಂದಿರುವವರ ಪತ್ತೆಗೆ ತನಿಖೆ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ