Headlines

ಇಂಧನ ದರ ಏರಿಕೆ ಬರೆ: ಸರಕು ಸಾಗಣೆ ದರ ಹೆಚ್ಚಳಕ್ಕೆ ಲಾರಿ ಮಾಲೀಕರ ನಿರ್ಧಾರ, ಪ್ರಧಾನಿ ಮೋದಿಗೆ ಸಿಮ್ಟಾ ಪತ್ರ

ಬೆಂಗಳೂರು, ಮೇ 30: ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಜಾಗತಿಕ ಪರಿಣಾಮವಾಗಿ ದೇಶದಲ್ಲಿ ಇಂಧನ ದರಗಳು ಪದೇಪದೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ಕೇವಲ ಹತ್ತು ದಿನಗಳಲ್ಲಿ ಬರೋಬ್ಬರಿ ನಾಲ್ಕು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಿಸಲಾಗಿದೆ. ಈ ಹಠಾತ್ ದರ ಏರಿಕೆಯಿಂದ ಕಂಗಾಲಾಗಿರುವ ದಕ್ಷಿಣ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟರ್ಸ್ ಅಸೋಸಿಯೇಷನ್ (SIMTA) ಹಾಗೂ ವಾಹನ ಮಾಲೀಕರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ತುರ್ತು ಪತ್ರ ಬರೆದಿದ್ದಾರೆ. ಇಂಧನ ಬೆಲೆ ಏರಿಕೆಗೆ ಪರ್ಯಾಯವಾಗಿ ಮುಂದಿನ ಆರು ತಿಂಗಳ ಕಾಲ ಟೋಲ್ ದರ ಮತ್ತು ವ್ಯಾಟ್ (VAT) ತೆರಿಗೆಯನ್ನು ಕಡಿತಗೊಳಿಸಬೇಕು, ಇಲ್ಲದಿದ್ದರೆ ಅನಿವಾರ್ಯವಾಗಿ ಸರಕು ಸಾಗಣೆ ದರವನ್ನು ಹೆಚ್ಚಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಗಡುವು ನೀಡಿ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಜಾಗತಿಕ ಯುದ್ಧದ ಹಿನ್ನೆಲೆಯಲ್ಲಿ ಕಳೆದ 10 ದಿನಗಳಲ್ಲಿ 4 ಬಾರಿ ತೈಲ ದರ ಏರಿಕೆ.
  • ಪೆಟ್ರೋಲ್ ₹7.97 ಹಾಗೂ ಡೀಸೆಲ್ ₹7.81 ರಷ್ಟು ದುಬಾರಿ.
  • ಇಂಧನ ಹೊರೆ ತಪ್ಪಿಸಲು ಕನಿಷ್ಠ 6 ತಿಂಗಳು ಟೋಲ್ ಶುಲ್ಕ ಮತ್ತು ವ್ಯಾಟ್ ಕಡಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ‘ಸಿಮ್ಟಾ’ ಮನವಿ.

ಬೆಲೆ ಏರಿಕೆಯ ಬಿಸಿ: ಕನಕಪುರ ಟು ಬೆಂಗಳೂರು ಬಾಡಿಗೆ ದುಬಾರಿ

ಯುದ್ಧದ ಪ್ರಕ್ಷುಬ್ಧ ವಾತಾವರಣದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗಿದ್ದು, ದೇಶದಲ್ಲಿ ಪೆಟ್ರೋಲ್ ಬೆಲೆ 7.97 ರೂ. ಹಾಗೂ ಡೀಸೆಲ್ ದರ 7.81 ರೂ.ನಷ್ಟು ಏರಿಕೆ ಕಂಡಿದೆ. ಇದರಿಂದಾಗಿ ಲಾರಿ ಮತ್ತು ಟ್ರಕ್ ಮಾಲೀಕರು ತೀವ್ರ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಲಾರಿ ಮಾಲೀಕರಾದ ಶಿವಶಂಕರ್, ‘ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚುತ್ತಿರುವುದರಿಂದ ವಾಹನ ನಿರ್ವಹಣೆ ಕಷ್ಟವಾಗಿದೆ. ಉದಾಹರಣೆಗೆ, ಕನಕಪುರದಿಂದ ಬೆಂಗಳೂರಿಗೆ 50 ಕೆಜಿ ತೂಕದ ಒಂದು ಚೀಲ ಸಾಗಿಸಲು ಈ ಹಿಂದೆ 50 ರೂ. ಬಾಡಿಗೆ ಪಡೆಯುತ್ತಿದ್ದೆವು. ಆದರೆ ಈಗಿನ ಪರಿಸ್ಥಿತಿಯಲ್ಲಿ ಅನಿವಾರ್ಯವಾಗಿ ಆ ದರವನ್ನು 70 ರೂ.ಗೆ ಏರಿಕೆ ಮಾಡಲು ಸಿದ್ಧತೆ ನಡೆಸುತ್ತಿದ್ದೇವೆ’ ಎಂದು ಅಳಲು ತೋಡಿಕೊಂಡಿದ್ದಾರೆ.

ಗ್ರಾಹಕರ ಜೇಬಿಗೆ ಕತ್ತರಿ ಬೀಳುವ ಆತಂಕ

ಲಾರಿ ಮಾಲೀಕರ ಸಂಘಟನೆಯು ಪ್ರಧಾನಿ ಅವರಿಗೆ ಬರೆದಿರುವ ಪತ್ರದಲ್ಲಿ, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಟೋಲ್ ದರಗಳನ್ನು ಇಳಿಸದಿದ್ದರೆ ಸಾಗಣೆ ವೆಚ್ಚ ಹೆಚ್ಚಿಸುವುದು ಅನಿವಾರ್ಯವಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಸರಕು ಸಾಗಣೆ ದರಗಳು ಏರಿಕೆಯಾದರೆ ಅದರ ನೇರ ಪರಿಣಾಮ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯ ಮೇಲೆ ಬೀರಲಿದೆ. ಈ ಕುರಿತು ಆತಂಕ ವ್ಯಕ್ತಪಡಿಸಿರುವ ಹೋಲ್ ಸೇಲ್ ವ್ಯಾಪಾರಿ ಅಣ್ಣೋಜಿ ರಾವ್, ‘ವಾಹನ ಮಾಲೀಕರು ಸಾಗಣೆ ವೆಚ್ಚವನ್ನು ಹೆಚ್ಚಿಸಿದರೆ, ಮಾರುಕಟ್ಟೆಗೆ ಬರುವ ಧಾನ್ಯಗಳು, ತರಕಾರಿ ಸೇರಿದಂತೆ ಪ್ರತಿಯೊಂದು ವಸ್ತುವಿನ ಬೆಲೆಯೂ ಹೆಚ್ಚಾಗುತ್ತದೆ. ಅಂತಿಮವಾಗಿ ಇದರ ಸಂಪೂರ್ಣ ಹೊರೆ ಮತ್ತು ಎಫೆಕ್ಟ್ ಸಾಮಾನ್ಯ ಗ್ರಾಹಕರ ಮೇಲೆಯೇ ಬೀಳಲಿದೆ’ ಎಂದಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ನಯಾರಾ ಪೆಟ್ರೋಲ್ ದರ ಹೆಚ್ಚಳ; ಲೀಟರ್​ಗೆ 5 ರೂ ಬೆಲೆ ಏರಿಕೆ

ತೈಲ ದರ ಏರಿಕೆಯ ಸರಣಿ ಪ್ರಭಾವದಿಂದಾಗಿ ಸದ್ಯದಲ್ಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುವ ಲಕ್ಷಣಗಳು ಕಾಣಿಸುತ್ತಿದ್ದು, ಕೇಂದ್ರ ಸರ್ಕಾರ ಸೂಕ್ತ ಪರಿಹಾರ ಮಾರ್ಗ ಪ್ರಕಟಿಸುತ್ತದೆಯೇ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *