ಪ್ರಿಯ ಶಿವಕುಮಾರ್..ಚುನಾವಣೆಯಲ್ಲಿ ಸೋಲಬಹುದು, ಸೈದ್ಧಾಂತಿಕವಾಗಿ ಸೋಲಬೇಡಿ: ಡಿಕೆಶಿಗೆ ಸಿದ್ದರಾಮಯ್ಯ ಭಾವುಕ ಪತ್ರ

ಬೆಂಗಳೂರು, (ಮೇ 30): ಡಿಕೆ ಶಿವಕುಮಾರ್ (dk shivakumar) ಅವರು ಇಂದು (ಮೇ 30) ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಜೂನ್ 3 ಸಂಜೆ 4.5ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಸಿದ್ದರಾಮಯ್ಯ (siddaramaiah), ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು ತಿಳಿಸುತ್ತಾ ಭಾವನಾತ್ಮಕ ಪತ್ರವೊಂದು ಬರೆದಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು 2ನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ ಎಂದು ಡಿಕೆಶಿಗೆ ಅಭಯ ನೀಡಿದ್ದಾರೆ.

ಮುಖ್ಯಾಂಶಗಳು

  • ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ ಕೆ ಶಿವಕುಮಾರ್
  • ಕರ್ನಾಟಕದ ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿದ್ದರಾಮಯ್ಯ
  • ಭಾವನಾತ್ಮ ಪತ್ರದ ಮೂಲಕ ಅಭಿನಂದನೆ ತಿಳಿಸಿದ ಹಂಗಾಮಿ ಸಿಎಂ
  • ಜೊತೆಗೆ ಡಿಕೆ ಶಿವಕುಮಾರ್​​​ಗೆ ಕೆಲ ಸಲಹೆ ಸೂಚನೆಗಳನ್ನ ನೀಡಿದ ಸಿದ್ದರಾಮಯ್ಯ

ಸಿದ್ದರಾಮಯ್ಯನವರ ಪತ್ರದಲ್ಲೇನಿದೆ?

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕವಾದ ಅಭಿನಂದನೆಗಳು.

ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ.ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ‍್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ ಎಂದಿದ್ದಾರೆ.

ಇದನ್ನೂ ನೋಡಿ: ಶಾಸಕಾಂಗ ಸಭೆಯಲ್ಲಿ ಅಚ್ಚರಿ ಬೆಳವಣಿಗೆ, ಒಂದು ಕ್ಷಣ ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

ಒಟ್ಟು ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಕನ್ನಡಿಗರ ಸೇವೆಯನ್ನು ಮಾಡಲು ಒದಗಿಬಂದಿದ್ದ ಅವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ಸಮೃದ್ಧ, ಸ್ವಾವಲಂಬಿ ಮತ್ತು ಸ್ವಾಭಿಮಾನಿ ರಾಜ್ಯವನ್ನಾಗಿ ಅಭಿವೃದ್ಧಿ ಪಡಿಸಿದ ಹೆಮ್ಮೆ ನನ್ನದಾಗಿದೆ. ಈ ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ. ಅದಕ್ಕೆ ಬೇಕಾಗಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು.

ಇಡೀ ದೇಶ ಇಂದು ಆರ್ಥಿಕ ಅಭದ್ರತೆಯಲ್ಲಿ ಭೀತಿಗೊಳಗಾಗಿರುವ ಸ್ಥಿತಿಯಲ್ಲಿ ರಾಜ್ಯದ ಜನತೆ ಕೂಡಾ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಸಮರ್ಥ ಆಡಳಿತದ ಮೂಲಕ ಅವರಲ್ಲಿ ಭರವಸೆಯನ್ನು ಹುಟ್ಟಿಸುವ ಜೊತೆಯಲ್ಲಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ.

ಚುನಾವಣೆಯಲ್ಲಿ ಸೋಲಬಹುದು, ಸೈದ್ಧಾಂತಿಕವಾಗಿ ಸೋಲಬೇಡಿ

ಇತ್ತೀಚಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಸ್ವಲ್ಪ ಹಿನ್ನಡೆಯಾಗಿದೆ. ನಾವು ಚುನಾವಣೆಯಲ್ಲಿ ಸೋಲಬಹುದು, ಗೆಲ್ಲಬಹುದು. ಆದರೆ ಸೈದ್ಧಾಂತಿಕವಾಗಿ ಎಂದೂ ಸೋಲಬಾರದು. ಒಂದು ರಾಜಕೀಯ ಪಕ್ಷ ಸೈದ್ಧಾಂತಿಕವಾಗಿ ಸೋತರೆ ಆ ಪಕ್ಷ ಚುನಾವಣೆಯನ್ನು ಗೆಲ್ಲಲಾಗದೆ ನಾಶವಾಗುತ್ತದೆ ಎಂದು ನಂಬಿದವನು ನಾನು.

ರಾಜ್ಯದ ಅಭಿವೃದ್ಧಿಯ ಜೊತೆಯಲ್ಲಿ ನಮ್ಮೆಲ್ಲರ ಮಾತೃಸ್ವರೂಪಿಯಾಗಿರುವ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸುವ ಹೊಣೆಗಾರಿಕೆ ಕೂಡಾ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಪಕ್ಷ ಇಂತಹ ಸವಾಲಿನ ಅನೇಕ ಅಗ್ನಿದಿವ್ಯಗಳನ್ನು ಯಶಸ್ವಿಯಾಗಿ ದಾಟಿ ಬಂದಿರುವ ಇತಿಹಾಸ ನಮಗೆಲ್ಲರಿಗೂ ಪ್ರೇರಣೆಯಾಗಲಿ. ನಿಮ್ಮ ನಾಯಕತ್ವ ಬಲ ಈ ಪ್ರಯತ್ನವನ್ನು ಸಫಲಗೊಳಿಸಲಿ.

ಕಾಂಗ್ರೆಸ್ ಪಕ್ಷದ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಸೌಹಾರ್ದ ಭಾರತವನ್ನು ಜಾತಿ-ಧರ್ಮಗಳ ಹೆಸರಲ್ಲಿ ಒಡೆದು ಹಾಕಲಾಗುತ್ತಿದೆ. ಸಂವಿಧಾನವನ್ನೇ ಪ್ರಶ್ನಿಸಲಾಗುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವವರ ದಮನ ಮಾಡಲಾಗುತ್ತಿದೆ. ಗಾಂಧಿಯವರನ್ನು ಕೊಂದವರು ಇಂದು ಗೋಡ್ಸೆಯನ್ನು ಮೆರೆಸಲು ಹೊರಟಿದ್ದಾರೆ.

2ನೇ ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಲ್ಲಿದ್ದೇವೆ

ಸಂವಿಧಾನದ ಆಶಯಗಳಾದ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ಮೌಲ್ಯಗಳನ್ನೇ ತನ್ನ ಸಿದ್ಧಾಂತವಾಗಿ ಸ್ವೀಕರಿಸಿರುವ ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ತಳಮಟ್ಟದಿಂದಲೇ ಗಟ್ಟಿಗೊಳಿಸಲು ಮುಂದಾಗುವುದೇ ದೇಶವನ್ನು ಉಳಿಸಲು ನಮಗೆ ಇರುವ ಏಕೈಕ ಮತ್ತು ಸರಿಯಾದ ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು ಸಂವಿಧಾನದ ಗೌರವವನ್ನು ಕಾಪಾಡಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ಹೋರಾಟದಲ್ಲಿ ಇಡೀ ಶಾಸಕಾಂಗ ಪಕ್ಷ ಮಾತ್ರವಲ್ಲ ರಾಜ್ಯದ ಏಳುಕೋಟಿ ಜನತೆ ನಿಮ್ಮ ಜೊತೆಯಲ್ಲಿರುತ್ತದೆ.

ನಿಮಗೆ ಸದಾ ಯಶಸ್ಸು ಸಿಗಲಿ ಎಂದು ಡಿಕೆ ಶಿವಕುಮಾರ್​​​ಗೆ ಟ್ಯಾಗ್ ಮಾಡಿದ್ದಾರೆ.

Source link

Leave a Reply

Your email address will not be published. Required fields are marked *