ಬಂಗಾಳದಲ್ಲಿ ಮಮತಾ ಬ್ಯಾನರ್ಜಿಗೆ ಶಾಕ್; ಟಿಎಂಸಿಯಿಂದ ಉಚ್ಚಾಟಿತರಾಗಿದ್ದ ರಿತಬ್ರತಾ ಬ್ಯಾನರ್ಜಿ ಈಗ ಪ್ರತಿಪಕ್ಷ ನಾಯಕ! – Kannada News

ಕೊಲ್ಕತ್ತಾ, ಜೂನ್ 3: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಈ ಹಿಂದೆ ಉಚ್ಚಾಟನೆಗೊಂಡಿದ್ದ ಹಿರಿಯ ನಾಯಕ ರಿತಬ್ರತಾ ಬ್ಯಾನರ್ಜಿ (Ritabrata Banerjee) ಈಗ ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ. ಟಿಎಂಸಿ ಪಕ್ಷದಲ್ಲಿ ಬಂಡಾಯ ಎದ್ದಿದ್ದು, ಪಕ್ಷವು ಅಧಿಕೃತವಾಗಿ ಇಬ್ಬಾಗವಾಗಿದೆ. ಇದು ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಆಘಾತವನ್ನು ನೀಡಿದೆ. ಟಿಎಂಸಿಯಿಂದ ಉಚ್ಚಾಟನೆಗೊಂಡಿದ್ದ ನಾಯಕ ರಿತಬ್ರತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ವಿಧಾನಸಭೆಯ ಹೊಸ ಪ್ರತಿಪಕ್ಷ ನಾಯಕನಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ಬರೋಬ್ಬರಿ 58 ಶಾಸಕರ ಬೆಂಬಲದೊಂದಿಗೆ ಅವರು ಈ ಜವಾಬ್ದಾರಿಯುತ ಹುದ್ದೆಯನ್ನು ಅಲಂಕರಿಸಿದ್ದಾರೆ. ಪಕ್ಷದಿಂದ ಉಚ್ಚಾಟನೆಗೊಂಡ ನಾಯಕರೊಬ್ಬರು ಇಷ್ಟು ದೊಡ್ಡ ಮಟ್ಟದ ಶಾಸಕರ ಬೆಂಬಲದೊಂದಿಗೆ ಪ್ರತಿಪಕ್ಷ ನಾಯಕರಾಗಿ ಹೊರಹೊಮ್ಮಿರುವುದು ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಿತಬ್ರತಾ ಬ್ಯಾನರ್ಜಿ ಅವರು ಅತ್ಯಂತ ಮಹತ್ವದ ಹೇಳಿಕೆ ನೀಡಿದ್ದಾರೆ. ತಮಗೆ ಟಿಎಂಸಿ ಪಕ್ಷದ ಶಾಸಕರ ಬೆಂಬಲವಿರುವುದನ್ನು ಪರೋಕ್ಷವಾಗಿ ಸೂಚಿಸಿರುವ ಅವರು, ತಮ್ಮ ರಾಜಕೀಯ ನಿಷ್ಠೆಯನ್ನು ಸ್ಪಷ್ಟಪಡಿಸಿದ್ದಾರೆ. “ನಾನು ಪ್ರತಿಪಕ್ಷ ನಾಯಕನಾಗಿ ಆಯ್ಕೆಯಾಗಿರಬಹುದು. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನಮ್ಮ ಸರ್ವೋಚ್ಚ ನಾಯಕಿ. ಇದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ವಲಸಿಗರಿಗೆ ಮುಚ್ಚಿತು ಬಿಜೆಪಿ ಬಾಗಿಲು; ತೃಣಮೂಲೀಕರಣ ತಡೆಯಲು ಬಂಗಾಳದ ಬಿಜೆಪಿ ಶಪಥ

“ನಮ್ಮ ಶಾಸಕಾಂಗ ಪಕ್ಷವು ಇಂದಿಗೂ ಟಿಎಂಸಿ ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನೇ ತನ್ನ ನಾಯಕಿ ಎಂದು ಪರಿಗಣಿಸುತ್ತದೆ. ಅವರು ನಮ್ಮ ಶಾಸಕಾಂಗ ಪಕ್ಷದ ಮುಖ್ಯ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸಬೇಕು ಎಂದು ನಾವು ವಿನಂತಿಸುತ್ತೇವೆ. ನಮ್ಮ ಬಳಿ ಮೂರನೇ ಎರಡರಷ್ಟು ಶಾಸಕರ ಬೆಂಬಲವಿದೆ. ಹಾಗಾಗಿ ನಾವೇ ನಿಜವಾದ ತೃಣಮೂಲ ಕಾಂಗ್ರೆಸ್. ಸಂಸದೀಯ ನಿಯಮಗಳ ಪ್ರಕಾರ ನಾವೇ ಪಶ್ಚಿಮ ಬಂಗಾಳ ವಿಧಾನಸಭೆಯ ನಿಜವಾದ ಮತ್ತು ಮುಖ್ಯ ವಿರೋಧ ಪಕ್ಷ” ಎನ್ನುವ ಮೂಲಕ ರಿತಬ್ರತಾ ಬ್ಯಾನರ್ಜಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ರಿತಬ್ರತಾ ಬ್ಯಾನರ್ಜಿ ಅವರಿಗೆ 58 ಶಾಸಕರು ಲಿಖಿತ ಬೆಂಬಲ ಸೂಚಿಸಿದ್ದು, ಇದರ ಆಧಾರದ ಮೇಲೆಯೇ ಅವರನ್ನು ಅಧಿಕೃತವಾಗಿ ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಟಿಎಂಸಿ ಪಕ್ಷದಿಂದ ಉಚ್ಚಾಟಿತರಾಗಿದ್ದರೂ ಮಮತಾ ಬ್ಯಾನರ್ಜಿ ಅವರನ್ನೇ ತಮ್ಮ ನಾಯಕಿ ಎಂದು ಕರೆಯುವ ಮೂಲಕ ರಿತಬ್ರತಾ ಕುತೂಹಲ ಮೂಡಿಸಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ; ಪ್ರತಿಭಟನೆಯಲ್ಲಿ ಕೇವಲ 5 ಶಾಸಕರು, 3 ಸಂಸದರು ಭಾಗಿ!

ಈ ಹೊಸ ಬೆಳವಣಿಗೆಯಿಂದಾಗಿ ಪಶ್ಚಿಮ ಬಂಗಾಳ ವಿಧಾನಸಭೆಯ ಒಳಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಸಾಂಪ್ರದಾಯಿಕ ಸಮೀಕರಣಗಳು ಸಂಪೂರ್ಣವಾಗಿ ಬದಲಾಗಲಿವೆ. ರಿತಬ್ರತಾ ಬ್ಯಾನರ್ಜಿ ಅವರ ಈ ಹೇಳಿಕೆಗಳು ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಮತ್ತು ಇತರ ವಿರೋಧ ಪಕ್ಷಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಅವರು ಸದನವನ್ನು ಹೇಗೆ ಮುನ್ನಡೆಸಲಿದ್ದಾರೆ ಮತ್ತು ಮಮತಾ ಬ್ಯಾನರ್ಜಿ ಜೊತೆ ಇವರ ಸಂಬಂಧ ಹೇಗೆ ಇರಲಿದೆ ಎಂಬುದು ಮುಂಬರುವ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *