ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಮಹಿಳಾ ಟಿ20 ವಿಶ್ವಕಪ್ ( Women’s T20 World Cup 2026) ಪಂದ್ಯ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿದೆ. ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹೀಗಾಗಿ ಉಭಯ ತಂಡಗಳು ಗೆಲುವಿನೊಂದಿಗೆ ಟೂರ್ನಿ ಆರಂಭಿಸಲು ನೋಡುತ್ತಿವೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಆದರೆ ನಾಯಕಿಯ ಆಯ್ಕೆಯನ್ನು ಸಮರ್ಥಿಸಿಕೊಳ್ಳುವಲ್ಲಿ ಶಫಾಲಿ ಹಾಗೂ ಜೆಮೀಮಾ ಎಡವಿದರು. ಆದಾಗ್ಯೂ ಈ ಮಹತ್ವದ ಪಂದ್ಯದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ ಉಪನಾಯಕಿ ಸ್ಮೃತಿ ಮಂಧಾನ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.
ಈ ಪಂದ್ಯದಲ್ಲಿ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಇನ್ನಿಂಗ್ಸ್ನ ಮೊದಲ ಎಸೆತವನ್ನು ಸಿಕ್ಸರ್ಗಟ್ಟಿದರಾದರೂ ಅದೇ ಓವರ್ನ ಕೊನೆಯ ಎಸೆತದಲ್ಲಿ ಕೀಪರ್ಗೆ ಕ್ಯಾಚಿತ್ತು ಔಟಾದರು. ಆ ಬಳಿಕ ಬಂದ ಜೆಮೀಮಾ ಕೂಡ ಕೇವಲ 1 ರನ್ಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಭಾರತ ಕೇವಲ 18 ರನ್ಗಳಿಗೆ ತನ್ನ ಮೊದಲೆರಡು ವಿಕೆಟ್ಗಳನ್ನು ಕಳೆದುಕೊಂಡಿತು. ಆದರೆ ಆ ಬಳಿಕ ಜೊತೆಯಾದ ಸ್ಮೃತಿ ಹಾಗೂ ಹರ್ಮನ್ ತಂಡದ ಇನ್ನಿಂಗ್ಸ್ ಕಟ್ಟಿದರು. ಇವರಿಬ್ಬರು ಮೂರನೇ ವಿಕೆಟ್ಗೆ 91 ರನ್ಗಳ ಜೊತೆಯಾಟವನ್ನಾಡಿತು.
ಆರಂಭದಲ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ, ಆ ಬಳಿಕ ನಿಧಾನವಾಗಿ ತಮ್ಮ ಗೇರ್ ಬದಲಿಸಿದರು. ಹೀಗಾಗಿ ಕೇವಲ 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಸ್ಮೃತಿ ಅವರ ಈ ಇನ್ನಿಂಗ್ಸ್ನಿಂದಾಗಿ ಭಾರತ ತಂಡ ಶತಕದ ಗಡಿ ಕೂಡ ದಾಟಿತು. ಅರ್ಧಶತಕದ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದ ಸ್ಮೃತಿ 68 ರನ್ ಬಾರಿಸಿ ಔಟಾದರು. ತಮ್ಮ ಇನ್ನಿಂಗ್ಸ್ನಲ್ಲಿ 44 ಎಸೆತಗಳನ್ನು ಎದುರಿಸಿದ ಸ್ಮೃತಿ 9 ಬೌಂಡರಿ ಹಾಗೂ 2 ಸಿಕ್ಸರ್ಗಳನ್ನು ಬಾರಿಸಿದರು.
ವಾಸ್ತವವಾಗಿ ವಿಶ್ವಕಪ್ಗೂ ಮುನ್ನ ಸ್ಮೃತಿ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದರು. ವಾಸ್ತವವಾಗಿ ಟಿ20 ವಿಶ್ವಕಪ್ಗೆ ಸಿದ್ಧರಾಗಲು ಮತ್ತು ಅಲ್ಲಿನ ಪರಿಸ್ಥಿತಿಗಳಿಗೆ ಹೊಂದಿಕೊಳ್ಳಲು ಹರ್ಮನ್ಪ್ರೀತ್ ಪಡೆ ಸಾಕಷ್ಟು ಮುಂಚಿತವಾಗಿಯೇ ಇಂಗ್ಲೆಂಡ್ಗೆ ತಲುಪಿತ್ತು. ಆದಾಗ್ಯೂ, ಈ ಪ್ರವಾಸ ಮಂಧಾನಾಗೆ ದುಃಸ್ವಪ್ನವಾಗಿ ಪರಿಣಮಿಸಿತ್ತು. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಖಾತೆ ತೆರೆಯದೆ ಪೆವಿಲಿಯನ್ ಸೇರಿದ್ದ ಮಂಧಾನ, ಎರಡನೇ ಪಂದ್ಯದಲ್ಲಿ 32 ರನ್ ಗಳಿಸುವ ಮೂಲಕ ಹಳೆಯ ಫಾರ್ಮ್ಗೆ ಮರಳುವ ಭರವಸೆಯನ್ನು ಮೂಡಿಸಿದ್ದರು. ಆದರೆ ಮೂರನೇ ಮತ್ತು ಅಂತಿಮ ಟಿ20ಯಲ್ಲಿ ಕೇವಲ 8 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು.
ಇದರ ನಂತರ, ವೆಸ್ಟ್ ಇಂಡೀಸ್ ವಿರುದ್ಧದ ವಿಶ್ವಕಪ್ನ ಮೊದಲ ಅಭ್ಯಾಸ ಪಂದ್ಯದಲ್ಲಿ 39 ರನ್ ಬಾರಿಸಿದ್ದ ಸ್ಮೃತಿ, ಇಂಗ್ಲೆಂಡ್ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಕೇವಲ 1 ರನ್ ಗಳಿಸುವ ಮೂಲಕ ಮತ್ತೆ ನಿರಾಶೆ ಮೂಡಿಸಿದ್ದರು. ಹೀಗಾಗಿ ಸ್ಮೃತಿ ಅವರ ಫಾರ್ಮ್ ತಂಡದ ಕಳವಳ ಹೆಚ್ಚಿಸಿತ್ತು. ಆದರೆ ಪಾಕ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಮಂಧಾನ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ.