Headlines

Video: ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ – Kannada News | Ranchi RSS Office Petrol Bomb Attack: Investigation Underway After Midnight Incident

ರಾಂಚಿ, ಜೂನ್ 17: ಜಾರ್ಖಂಡ್ ರಾಜಧಾನಿ ರಾಂಚಿಯ ನಿವಾರಣ್‌ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಾಂತೀಯ ಕಚೇರಿಯ ಮೇಲೆ ಮಂಗಳವಾರ ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಸಕಾಲದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಪ್ರಮಾಣದ ಆಸ್ತಿ ಹಾನಿ ಸಂಭವಿಸಿಲ್ಲ.

ಮಂಗಳವಾರ ಮಧ್ಯರಾತ್ರಿ ಸುಮಾರು 12.36 ರ ವೇಳೆಗೆ ಈ ದಾಳಿ ನಡೆದಿದೆ. ಬುಧವಾರ ಮುಂಜಾನೆ ಆರ್‌ಎಸ್‌ಎಸ್ ಸ್ವಯಂಸೇವಕರು ಪ್ರಾರ್ಥನೆಗಾಗಿ ಸಭಾಂಗಣಕ್ಕೆ ಹೋದಾಗ ಅಲ್ಲಿ ಪೆಟ್ರೋಲ್ ತುಂಬಿದ್ದ ಬಾಟಲಿಗಳು ಪತ್ತೆಯಾಗಿವೆ. ಇದರಿಂದ ಅನುಮಾನಗೊಂಡು ಕಚೇರಿಯ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಇಬ್ಬರು ಯುವಕರು ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ದಾಳಿಯ ಸಮಯದಲ್ಲಿ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ನಿದ್ರಿಸುತ್ತಿದ್ದರು.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಕೇಂದ್ರ ರಕ್ಷಣಾ ರಾಜ್ಯ ಸಚಿವ ಸಂಜಯ್ ಸೇಠ್, ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಹಾಗೂ ನೂರಾರು ಆರ್‌ಎಸ್‌ಎಸ್ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದರು. ಇದು ಅತ್ಯಂತ ಗಂಭೀರವಾದ ವಿಷಯವಾಗಿದ್ದು, ಯಾವುದೋ ದೊಡ್ಡ ಸಂಚಿಗೆ ಸಿದ್ಧತೆ ನಡೆದಂತೆ ಕಾಣುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ ಎಂದು ಬಾಬುಲಾಲ್ ಮರಾಂಡಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು

ಮಾಹಿತಿ ಸಿಗುತ್ತಿದ್ದಂತೆಯೇ ಸದರ್ ಡಿಎಸ್‌ಪಿ ನೇತೃತ್ವದ ದೊಡ್ಡ ಪೊಲೀಸ್ ಪಡೆ ಸ್ಥಳಕ್ಕೆ ಆಗಮಿಸಿ ಇಡೀ ಕಚೇರಿಯನ್ನು ಸುತ್ತುವರೆದಿದೆ. ವಿಧಿವಿಜ್ಞಾನ ತಂಡವು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಕಚೇರಿಯ ಸುತ್ತಮುತ್ತಲಿನ ರಸ್ತೆಗಳ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ದಾಳಿಕೋರರ ಪತ್ತೆಗೆ ಜಾಲ ಬೀಸಿದ್ದಾರೆ.

ವಿಡಿಯೋ

ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರಲ್ಲಿ ಆತಂಕ ಮೂಡಿದ್ದು, ಮುಂಜಾಗ್ರತಾ ಕ್ರಮವಾಗಿ ಕಚೇರಿಯ ಸುತ್ತಲೂ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕೆಂದು ರಾಂಚಿ ಜಿಲ್ಲಾ ಆಡಳಿತ ಮನವಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *