ಬೆಂಗಳೂರು, (ಜೂನ್ 19): ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಿಗೆ (guarantee schemes) ಆಪರೇಷನ್ ಮಾಡಲು ಸಿಎಂ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಸಂಪೂರ್ಣವಾಗಿ ಬ್ರೇಕ್ ಹಾಕಿ ಅರ್ಹರಿಗೆ ಮುಟ್ಟಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕಾಗಿ ನಾನಾ ನಿಯಮಗಳನ್ನ ಜಾರಿಗೆ ತರುವ ಚಿಂತನೆಗಳು ನಡೆದಿವೆ. ಇಂದು (ಜೂನ್ 19) ವಿಧಾನಸೌಧದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದೆ
ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆಗೆ ಮರು ಪರಿಶೀಲನೆ ಅರ್ಜಿ ಹಾಕಬೇಕು. ಮರು ಪರಿಶೀಲನೆ ಅರ್ಜಿ ಸಲ್ಲಿಕೆ ಬಳಿಕ ಮನೆ ಮನೆಗೆ ತೆರಳಿ ಅಧಿಕಾರಿಗಳಿಂದ ಸರ್ವೆ ಮಾಡಿಸುವ ಚಿಂತನೆ ನಡೆಸಿದ್ದು, ಒಟ್ಟು 10 ಅಂಶಗಳ ಮೂಲಕ ಮಾಹಿತಿ ಪಡೆಯಲು ಸರ್ಕಾರ ಮುಂದಾಗಿದೆ. ಯಜಮಾನಿ ಹೆಸರು, ಪಡಿತರ ಚೀಟಿ ಸಂಖ್ಯೆ, ಮಂಜೂರಾತಿ ಪತ್ರ ಸಂಖ್ಯೆ, ಬ್ಯಾಂಕ್ ಖಾತೆ, ಮನೆ ವಿಳಾಸ, ಮತದಾರರ ಗುರುತಿನ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಪತಿಯ ಮಾಹಿತಿ, ಯಾವ ಕ್ಯಾಟಗರಿ, ಮೊಬೈಲ್ ಸಂಖ್ಯೆ ಹೀಗೆ 10 ಅಂಶಗಳ ಮೂಲಕ ಮಾಹಿತಿ ಪಡೆಯಲು ಮುಂದಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.